ADVERTISEMENT

ಕನಕಪುರ | ಭ್ರಷ್ಟಾಚಾರ ಸಮಾಜದ ಕ್ಯಾನ್ಸರ್‌: ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 2:22 IST
Last Updated 21 ಡಿಸೆಂಬರ್ 2025, 2:22 IST
ಕನಕಪುರ ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಲೋಕಾಯುಕ್ತ ಸಾರ್ವಜನಿಕ ದೂರು ವಿಚಾರಣೆ ಮತ್ತು ಇತ್ಯರ್ಥ ಸಭೆಯನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನೆರವೇರಿಸಿದರು
ಕನಕಪುರ ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಲೋಕಾಯುಕ್ತ ಸಾರ್ವಜನಿಕ ದೂರು ವಿಚಾರಣೆ ಮತ್ತು ಇತ್ಯರ್ಥ ಸಭೆಯನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನೆರವೇರಿಸಿದರು   

ಕನಕಪುರ: ಸರ್ಕಾರಿ ನೌಕರರು ಸೇವಾ ಮನೋಭಾವದಿಂದ ಕಾನೂನಿನಡಿ ಸಮಾನ ಸೇವೆ ಮಾಡಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅಭಿಪ್ರಾಯಪಟ್ಟರು.

ಶನಿವಾರ ಇಲ್ಲಿನ ಮಳೆಗಾಳು ರಸ್ತೆ ಅರ್ಕಾವತಿ ಸೇತುವೆ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ಕನಕಪುರ ತಾಲ್ಲೂಕಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆ ಮತ್ತು ಇತ್ಯರ್ಥ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಸರ್ಕಾರ ರೂಪಿಸುವ ಕಾನೂನು ಮತ್ತು ಯೋಜನೆಗಳನ್ನು ಸರ್ಕಾರಿ ನೌಕರರು ನಿಷ್ಠೆಯಿಂದ ಜಾರಿಗೆ ತರದಿದ್ದರೆ ಸಮಾಜದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಲಂಚ, ಸ್ವಜನ ಪಕ್ಷಪಾತಕ್ಕೆ ಆಸೆಪಟ್ಟು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಮಾಡಬಾರದು ಎಂದು ಸಲಹೆ ನೀಡಿದರು.

ADVERTISEMENT

‘ಭ್ರಷ್ಟಾಚಾರ ಕ್ಯಾನ್ಸರ್‌ ಇದ್ದಂತೆ. ಅದು ಸಮಾಜದಲ್ಲಿ ಹರಡಿದರೆ ಸಮಾಜ ದುರ್ಬಲಗೊಳ್ಳುತ್ತದೆ ಮತ್ತು ಸರ್ಕಾರದ ಒಳ್ಳೆಯ ಉದ್ದೇಶ ನಾಶಮಾಡುತ್ತದೆ’ ಎಂದು ಹೇಳಿದರು.

1984ರಲ್ಲಿ ಸ್ಥಾಪನೆಯಾದ ಲೋಕಾಯುಕ್ತ ಸಂಸ್ಥೆಯು ಸರ್ಕಾರಿ ನೌಕರರ ದೋಷ, ಕರ್ತವ್ಯ ಲೋಪ ಮತ್ತು ಕಾನೂನುಬಾಹಿರ ಕಾರ್ಯ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುತ್ತದೆ. ಸರ್ಕಾರಿ ನೌಕರರು ಕಟ್ಟುನಿಟ್ಟಾದ ನೈತಿಕ ಮಾನದಂಡ ಪಾಲಿಸಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬರಿಗೂ ಗೌರವಯುತ ಜೀವನ ಖಚಿತ ಪಡಿಸುವುದು ಎಲ್ಲ ಕಾನೂನುಗಳ ಗುರಿ. ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗ ಈ ದಿಕ್ಕಿನಲ್ಲಿ ಕಾನೂನು ರೂಪಿಸುತ್ತದೆ ಮತ್ತು ಪತ್ರಿಕೆಗಳು ಇವುಗಳ ಮೇಲ್ವಿಚಾರಣೆ ನಡೆಸುತ್ತವೆ ಎಂದರು.

ಸ್ಥಳೀಯ ಮಟ್ಟದಲ್ಲಿ ಪರಿಹರಿಸಬಹುದಾದ ದೂರುಗಳನ್ನು ಅಲ್ಲಿಯೇ ಬಗೆಹರಿಸಲು ಈ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಪೊಲೀಸ್ ಅಧಿಕಾರಿಗಳ ಮೂಲಕ ಸಂಬಂಧಿತ ಅಧಿಕಾರಿಗಳು ಮತ್ತು ದೂರುದಾರರನ್ನು ಗುರುತಿಸಿ ನೋಟಿಸ್ ನೀಡಲಾಗಿದೆ ಎಂದರು.

ಸಾರ್ವಜನಿಕರು ಮತ್ತು ಅಧಿಕಾರಿಗಳು ಶಾಂತಿಯುತವಾಗಿ ವರ್ತಿಸಬೇಕು. ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲಾಗದ ಪ್ರಕರಣಗಳನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರ್ಗಾಯಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಸಿವಿಲ್ ನ್ಯಾಯಾಧೀಶರು, ಉಪ ಲೋಕಾಯುಕ್ತರ ವಿಶೇಷ ಕರ್ತವ್ಯಾಧಿಕಾರಿ ಕಿರಣ್ ಪಾಟೀಲ, ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತಾ ಪಿ.ಆರ್, ಲೋಕಾಯುಕ್ತ ಎಸ್ಪಿ ಸ್ನೇಹಾ, ಹೆಚ್ಚುವರಿ ಜಿಲ್ಲಾಧಿಕಾರಿ ಚಂದ್ರಯ್ಯ.ಆರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಉಪವಿಭಾಗಾಧಿಕಾರಿ ಬಿನೋಯ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತಿರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.