ADVERTISEMENT

ಮಾದಾಪುರ ಸರ್ಕಾರಿ ಶಾಲೆಯ ನೂತನ ಕೊಠಡಿ ಉದ್ಘಾಟನೆ, ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 7:33 IST
Last Updated 26 ಫೆಬ್ರುವರಿ 2026, 7:33 IST
<div class="paragraphs"><p>ರಾಮನಗರ ತಾಲ್ಲೂಕಿನ ಮಾದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಎಲ್‌ಕೆಜಿ ಮತ್ತು ಯುಕೆಜಿ ಕೊಠಡಿಗಳ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ</p></div>

ರಾಮನಗರ ತಾಲ್ಲೂಕಿನ ಮಾದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಎಲ್‌ಕೆಜಿ ಮತ್ತು ಯುಕೆಜಿ ಕೊಠಡಿಗಳ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ

   

ರಾಮನಗರ: ‘ಶಿಕ್ಷಣವು ಬದುಕನ್ನು ಬದಲಾಯಿಸುತ್ತದೆ. ಆ ಮೂಲಕ, ಸಾಮಾಜಿಕ ಬದಲಾವಣೆಗೆ ಕಾರಣವಾಗುತ್ತದೆ. ಬಡವರು ಮತ್ತು ಶೋಷಿತರ ಬಿಡುಗಡೆಗೆ ಇರುವ ಏಕೈಕ ಅಸ್ತ್ರ ಶಿಕ್ಷಣ. ಹಾಗಾಗಿ, ತಂದೆ–ತಾಯಂದಿರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಜಿ. ಬಸವರಾಜ್ ಸಲಹೆ ನೀಡಿದರು.

ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಎಲ್‌ಕೆಜಿ ಮತ್ತು ಯುಕೆಜಿ ಕೊಠಡಿಗಳ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಸಾಮಾಜಿಕ ನ್ಯಾಯದ ದಿನದಂದು ಶಾಲೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಂಡು ಸಾಮಾಜಿಕ ನ್ಯಾಯದ ಸಂದೇಶ ಸಾರಿರುವುದು ಶ್ಲಾಘನೀಯ’ ಎಂದರು.

ADVERTISEMENT

‘ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಶೋಷಿತರು ಹಾಗೂ ಕೂಲಿ ಕಾರ್ಮಿಕರಿಗೆ ಶಿಕ್ಷಣವನ್ನು ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಕೆಲಸವಾಗಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಯಿಂದಲೇ ಅದು ಸಾಧ್ಯವಾಗಬೇಕು. ಶಾಲಾ ಹಂತದಲ್ಲಿ ಮಕ್ಕಳಲ್ಲಿ ನ್ಯಾಯದ ಪ್ರಜ್ಞೆ ಬೆಳೆಯಬೇಕು’ ಎಂದು ತಿಳಿಸಿದರು.

ಕರ್ನಾಟಕ ಆಡಳಿತ ಮಂಡಳಿಯ ಮಾಜಿ ಸದಸ್ಯ ಟಿ. ನಾರಾಯಣಸ್ವಾಮಿ ಮಾತನಾಡಿ, ‘ರೈತರು ಮತ್ತು ಕಾರ್ಮಿಕರು ಖಾಸಗಿ ಶಾಲೆಯ ವ್ಯಾಮೋಹಕ್ಕೆ ಬಲಿಯಾಗಿ ತಾವುಗಳು ಕಷ್ಟಪಟ್ಟು ದುಡಿದ ಹಣವನ್ನೆಲ್ಲ ಕಳೆದುಕೊಳ್ಳುತ್ತಿದ್ದಾರೆ. ಅದೇ ಹಣವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಿ, ತಮ್ಮ ಮಕ್ಕಳ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದರು.

ಶಾಲಾ ಕೊಠಡಿ ನಿರ್ಮಾಣ ಮಾಡಲು ಗ್ರಾಮಸ್ಥರಾದ ಅಲುಮೇಲಮ್ಮ ಮತ್ತು ರಾಮಚಂದ್ರ ಅವರು ಸ್ಥಳ ದಾನ ಮಾಡಿದ್ದಾರೆ. ಕಟ್ಟಡ ನಿರ್ಮಾಣ ಮಾಡಲು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕಿ ಡಾ. ನಳಿನಿ ಎಂ.ಕೆ ಮತ್ತು ಡಾ. ಮಂಜುಳ ಎಂ.ಕೆ ಸಹೋದರಿಯರು ತಮ್ಮ ತಂದೆ–ತಾಯಿ ದಿ. ಶ್ರೀಮತಿ ಸರೋಜ ಎಚ್.ಆರ್ ಮತ್ತು ಕೇಶವ ನಾರಾಯಣ ಕೆ.ಎನ್ ಸ್ಮರಣಾರ್ಥ ನಿರ್ಮಿಸಿ ಕೊಟ್ಟಿದ್ದಾರೆ. ಮೇಘನ ಕೃಷ್ಣಸ್ವಾಮಿ ಅವರು ಶಾಲೆಗೆ ಸ್ಮಾರ್ಟ್ ಕ್ಲಾಸ್ ಅಳವಡಿಸಲು ಧನಸಹಾಯ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಪಿ. ಗಂಗರಾಜು ಮತ್ತು ವೆಂಕಟೇಶಯ್ಯ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸೋಮಲಿಂಗಯ್ಯ ಮಾತನಾಡಿದರು. ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ರಘುಪತಿ ಎಂ.ಜೆ ವಹಿಸಿದ್ದರು. ಆರ್. ಮಂಜುಳ, ಲಕ್ಷ್ಮೀನಾರಾಯಣ, ಮುಖ್ಯ ಶಿಕ್ಷಕಿ ಗಾಯತ್ರಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ದಾಕ್ಷಾಯಣಿ, ಎಂ.ವಿ. ವೆಂಕಟೇಶಮೂರ್ತಿ, ಶಿವಕುಮಾರ ಸ್ವಾಮಿ, ವಿದ್ಯಾ ವಿನಾಯಕ ಗೆಳೆಯರ ಬಳಗ ಮತ್ತು ಜೈ ಭೀಮ್ ಗೆಳೆಯರ ಬಳಗದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.