ಮಾಗಡಿ: ತಾಲ್ಲೂಕಿನ ಸೋಲೂರು ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಭೇಟಿ ನೀಡಿದರು. ಆಸ್ಪತ್ರೆ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವುದರಿಂದ ಅಪಘಾತಗಳು ಹೆಚ್ಚಾಗಿ ನಡೆಯುತ್ತವೆ. ಈ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಡಿಎಚ್ಒ, ಟಿಎಚ್ಒಗಳು ವೈದ್ಯರನ್ನು ಸರಿಯಾಗಿ ಕಾರ್ಯ ನಿರ್ವಹಿಸುವ ಕೆಲಸ ಮಾಡಿಸಬೇಕು ಎಂದು ತಾಕೀತು ಮಾಡಿದರು.
ರಾತ್ರಿ ವೇಳೆ ವೈದ್ಯರು ಇರುವುದಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.
ನೆಲಮಂಗಲದಲ್ಲಿ ನೂರು ಹಾಸಿಗೆ ಹೊಸ ಕಟ್ಟಡಕ್ಕೆ ಭೂಮಿ ಪೂಜೆ: ಮುಂದಿನ ತಿಂಗಳು ನೆಲಮಂಗಲ ಪಟ್ಟಣದಲ್ಲಿ 100 ಹಾಸಿಗೆ ಸಾಮರ್ಥ್ಯದ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಕೆಲಸನು ಮಾಡಲಾಗುವುದು ಎಂದರು.
ನೆಲಮಂಗಲ ತಾಲ್ಲೂಕು ಸರ್ಕಾರಿ ಆಸ್ಪತ್ರೆ, ದಾಬಸ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ, ತ್ಯಾಮಗೊಂಡ್ಲು ಸಮುದಾಯ ಆರೋಗ್ಯ ಕೇಂದ್ರ, ಟಿ.ಬೇಗೂರು ಗ್ರಾಮದಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗೆ ನಿಗದಿಪಡಿಸಿದ ಜಾಗವನ್ನು ಸಚಿವ ದಿನೇಶ್ ಗುಂಡೂರಾವ್, ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಜೊತೆ ಪರಿಶೀಲನೆ ನಡೆಸಿದರು.
ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ಗೌಡ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಲಕ್ಕೆನಹಳ್ಳಿ ಗ್ರಾ.ಪಂ.ಅಧ್ಯಕ್ಷ ನಾರಾಯಣ್, ಉಪಾಧ್ಯಕ್ಷ ಗಂಗರಾಜು ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.