ಮಾಗಡಿ: ಐತಿಹಾಸಿಕ ಮಾಗಡಿ ಕೋಟೆ ಅಭಿವೃದ್ಧಿಗೆ ಸಚಿವ ಸಂಪುಟ ಸಭೆಯಲ್ಲಿ ₹103 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಿರುವ ಸರ್ಕಾರಕ್ಕೆ ಶಾಸಕ ಎಚ್.ಸಿ.ಬಾಲಕೃಷ್ಣ ಅಭಿನಂದನೆ ಸಲ್ಲಿಸಿದರು.
ಪಟ್ಟಣದ ಜ್ಯೋತಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇನ್ನೊಂದು ತಿಂಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಾಗಡಿಗೆ ಕರೆಸಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಕೆಂಪೇಗೌಡರ ಕಾಲದ ಕೋಟೆಯನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ನೀಡಲಾಗುವುದು’ ಎಂದರು.
‘ವಿರೋಧ ಪಕ್ಷದವರು ಕಾಂಗ್ರೆಸ್ ಸರ್ಕಾರವು ಒಕ್ಕಲಿಗ ಸಮುದಾಯದ ವಿರೋಧಿ ಎಂಬ ಹಣೆಪಟ್ಟಿ ಕಟ್ಟುತ್ತಿದ್ದಾರೆ. ಆದರೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಸರಿಟ್ಟಿದ್ದು, ಕೆಂಪೇಗೌಡ ಪ್ರಾಧಿಕಾರ ಸ್ಥಾಪನೆ ಮಾಡಿದ್ದು ಸಿದ್ದರಾಮಯ್ಯ ಅವರ ಸರ್ಕಾರ. ಈಗ ಕೆಂಪೇಗೌಡರ ಕಾಲದ ಕೋಟೆ ಅಭಿವೃದ್ಧಿಗೆ ಮುಂದಾಗಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ಒಕ್ಕಲಿಗ ಜನಾಂಗದ ಅಭಿವೃದ್ಧಿಗೂ ಬದ್ಧವಾಗಿದೆ ಎಂಬುದನ್ನು ತಿಳಿದುಕೊಳ್ಳಬೇಕಿದೆ’ ಎಂದು ಕುಟುಕಿದರು.
‘ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ ಇನ್ನೂ ಕೆಲವೇ ದಿನಗಳಲ್ಲಿ ಚಾಲನೆ ಸಿಗಲಿದೆ. ನಂತರ ಕೆಂಪೇಗೌಡರ ಕಾಲದ ಕೆರೆಗಳ ಅಭಿವೃದ್ಧಿ ಪಡಿಸುವ ಮೂಲಕ ಮಾಗಡಿಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು’ ಎಂದು ಭರವಸೆ ನೀಡಿದರು.
‘ಶ್ರೀರಂಗ ಏತ ನೀರಾವರಿ ಹಾಗೂ ಎತ್ತಿನಹೊಳೆ ಮೂಲಕ ತಾಲ್ಲೂಕಿನಲ್ಲಿ ನೀರು ಹರಿಸುವ ಕೆಲಸವನ್ನು ಮಾಡಲಾಗುತ್ತದೆ. ಜೆಡಿಎಸ್ ಪಕ್ಷದಲ್ಲಿ ನಾನು ಮುಂದುವರೆದಿದ್ದರೆ ಮಾಗಡಿ ತಾಲ್ಲೂಕಿಗೆ ಇಷ್ಟು ಅನುದಾನ ತರಲು ಸಾಧ್ಯವಾಗುತ್ತಿರಲಿಲ್ಲ. ಪಕ್ಷ ಸೇರಿ ವರ್ಷಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯಾಗುತ್ತಿದೆ. ಗೌರಮ್ಮನಕೆರೆ ಹೊಂಬಾಳಮ್ಮನಕೆರೆ, ಕೆಂಪಸಾಗರ ಕೆರೆ ಕಾಮಗಾರಿಗಳು ಡಿಸೆಂಬರ್ನಲ್ಲಿ ಪೂರ್ಣಗೊಳ್ಳಲಿವೆ’ ಎಂದರು.
‘ಕೆಲವರು ನನ್ನ ವಿರುದ್ಧ ಭೂಕಬಳಿಕೆ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಗೂ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ. ತನಿಖೆ ನಂತರ ಸತ್ಯಾಸತ್ಯತೆ ತಿಳಿಯಲಿದೆ’ ಎಂದು ಬಾಲಕೃಷ್ಣ ತಿಳಿಸಿದರು.
ಈ ವೇಳೆ ತಹಶೀಲ್ದಾರ್ ಶರತ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಕಲ್ಕೆರೆ ಶಿವಣ್ಣ, ಪುರಸಭಾ ಉಪಾಧ್ಯಕ್ಷ ರಿಯಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್, ಸದಸ್ಯರಾದ ರಂಗಹನುಮಯ್ಯ, ಗೋಪಾಲ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.