ADVERTISEMENT

ಚನ್ನಪಟ್ಟಣ: ಸಕಾರದ ಸೌಲಭ್ಯ ಸದ್ಬಳಕೆ– ಇರುಳಿಗರಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 2:37 IST
Last Updated 23 ಫೆಬ್ರುವರಿ 2026, 2:37 IST
ಚನ್ನಪಟ್ಟಣ ತಾಲ್ಲೂಕಿನ ಇರುಳಿಗರದೊಡ್ಡಿ ಗ್ರಾಮದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನದ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಎಚ್. ಅಣ್ಣಯ್ಯನವರ ಉದ್ಘಾಟಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಸವಿತಾ, ತಹಶೀಲ್ದಾರ್ ಗಿರೀಶ್, ಇತರರು ಹಾಜರಿದ್ದರು
ಚನ್ನಪಟ್ಟಣ ತಾಲ್ಲೂಕಿನ ಇರುಳಿಗರದೊಡ್ಡಿ ಗ್ರಾಮದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನದ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಎಚ್. ಅಣ್ಣಯ್ಯನವರ ಉದ್ಘಾಟಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಸವಿತಾ, ತಹಶೀಲ್ದಾರ್ ಗಿರೀಶ್, ಇತರರು ಹಾಜರಿದ್ದರು   

ಚನ್ನಪಟ್ಟಣ: ಸರ್ಕಾರವು ಇರುಳಿಗ ಜನಾಂಗದವರ ಅಭ್ಯುದಯಕ್ಕೆ ರೂಪಿಸಿರುವ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡು ಜನಾಂಗ ಪ್ರಗತಿ ಸಾಧಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಎಚ್. ಅಣ್ಣಯ್ಯನವರ ಕಿವಿಮಾತು ಹೇಳಿದರು.

ವಿಶ್ವ ಸಾಮಾಜಿಕ ನ್ಯಾಯ ದಿನದ ಅಂಗವಾಗಿ ಶನಿವಾರ ಇರುಳಿಗರದೊಡ್ಡಿ ಗ್ರಾಮದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ಈ ಕಾರ್ಯಕ್ರಮ ಆಯೋಜಿಸಿದ್ದವು.

ADVERTISEMENT

ಇರುಳಿಗರ ಏಳಿಗೆಗೆ ಸರ್ಕಾರ ರೂಪಿಸಿರುವ ಯೋಜನೆ, ಪಡೆಯುವ ವಿಧಾನ, ವಿವಿಧ ಇಲಾಖೆಗಳ ಜನಕಲ್ಯಾಣ ಯೋಜನೆ ತಿಳಿದುಕೊಳ್ಳಬೇಕು. ಸರ್ಕಾರದ ಸೌಲಭ್ಯ ಪಡೆಯಲು ಬೇಕಾದ ದಾಖಲಾತಿ ಮಾಹಿತಿ ಪಡೆದುಕೊಳ್ಳಬೇಕು. ಸಂಬಂಧಿಸಿದ ಇಲಾಖೆಗಳಲ್ಲಿರುವ ಸೌಲಭ್ಯಗಳಿಗೆ ಅರ್ಜಿ ಹಾಗೂ ದಾಖಲಾತಿ ಸಲ್ಲಿಸಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಸರ್ಕಾರದಿಂದ ಕೆಲವು ಯೋಜನೆಗಳಡಿ ಅರ್ಹರಿಗೆ ವಾಹನ ನೀಡಲಾಗುತ್ತದೆ. ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರ ಕಾರ್ಡ್ ಗಳನ್ನು ನೀಡಲಾಗುತ್ತದೆ. ಅವುಗಳನ್ನು ಪಡೆದುಕೊಳ್ಳಬೇಕು. ಹಾಗೆಯೆ ಸಮುದಾಯದ ಎಲ್ಲಾ ಹೆಣ್ಣು ಮಕ್ಕಳು ಶಿಕ್ಷಣ ಪಡೆಯಬೇಕು. ಯಾರೊಬ್ಬರೂ ಶಿಕ್ಷಣದಿಂದ ವಂಚಿತರಾಗಬಾರದು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಸವಿತಾ ಮಾತನಾಡಿ, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರಿಗೂ ಸಮಾನತೆ, ಸಮಾನವಾದ ಆಯ್ಕೆ ನೀಡುವ ದ್ಯೇಯೋದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಯೋಜಿಸಲಾಗಿದೆ. ಇರುಳಿಗರದೊಡ್ಡಿಯ ನಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಲಾಗುತ್ತಿದೆ. ಹೆಚ್ಚಿನ ಸಮಸ್ಯೆಗಳಿದ್ದರೆ ಅವುಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತರಬೇಕು. ಅಥವಾ ಉಚಿತ ದೂರವಾಣಿ ಸಂಖ್ಯೆ 15100 ಗೆ ಕರೆ ಮಾಡಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರ್ ಬಿ.ಎನ್.ಗಿರೀಶ್, ಡಿವೈಎಸ್ಪಿ ಕೆ.ಸಿ. ಗಿರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಭಾಗವಹಿಸಿದ್ದರು. ಪಿಡಿಒ ಸಿದ್ದರಾಮ ಸ್ವಾಗತಿಸಿದರು.


ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತವಾಗಿ ಬೈಸಿಕಲ್ ವಿತರಿಸಲಾಯಿತು. ಫಲಾನುಭವಿಗಳಿಗೆ  ಕಾರ್ಮಿಕ ಇಲಾಖೆ ವಿಮೆ ಪಾಲಿಸಿ ಕಾರ್ಡ್ ವಿತರಿಸಲಾಯಿತು. ಗ್ರಾಮಸ್ಥರು ವಿದ್ಯುತ್, ಮನೆ, ಪಡಿತರ ಚೀಟಿ, ಕುಡಿಯುವ ನೀರು, ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ನಿವೇದನೆ ಮಾಡಿಕೊಂಡರು. ಈ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.