ADVERTISEMENT

ಮೇಕೆದಾಟು: ಮೂರನೇ ದಿನದ ಪಾದಯಾತ್ರೆಗೆ ಜನಸಾಗರ! ವಿಡಿಯೊ ನೋಡಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 13:07 IST
Last Updated 11 ಜನವರಿ 2022, 13:07 IST
ಮೇಕೆದಾಟು ಪಾದಯಾತ್ರೆ
ಮೇಕೆದಾಟು ಪಾದಯಾತ್ರೆ   

ರಾಮನಗರ: ಮೇಕೆದಾಟುಮೂರನೇ ದಿನದ ಪಾದಯಾತ್ರೆಗೆ ಮೈಸೂರಿನಿಂದ ಜನರ ದಂಡೇ ಬಂದಿತ್ತು. ತಮ್ಮೂರಿನ ಕಾರ್ಯಕರ್ತರನ್ನು ಕಂಡು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉತ್ಸಾಹದಿಂದ ಹೆಜ್ಜೆ ಹಾಕಿದರು. ಡಿ.ಕೆ. ಶಿವಕುಮಾರ್ ಮಾಧ್ಯಮಗಳ ಮುಂದೆ ಮೌನಕ್ಕೆ ಶರಣಾಗಿದ್ದಾರೆ.

ಕಾಂಗ್ರೆಸ್ ನಾಯಕರೊಂದಿಗೆ ಮೈಸೂರು ಭಾಗದ ಶಾಸಕರು , ಮುಖಂಡರು ಭಾಗಿಯಾದರು.

8-10 ಸಾವಿರ ಜನ ಮಂಗಳವಾರದ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಬೆಳಿಗ್ಗೆ 11ಕ್ಕೆ ಪಾದಯಾತ್ರೆ ಆರಂಭಗೊಂಡಿದ್ದು, ಮಧ್ಯಾಹ್ನ 3ರ ವೇಳೆಗೆ ನಾಯಕರು ಕನಕಪುರ ತಾಲ್ಲೂಕಿನ ಗಾಣಾಳು ಗ್ರಾಮದಲ್ಲಿ ಊಟ ಹಾಗೂ ವಿಶ್ರಾಂತಿಯ ಮೊರೆ ಹೋದರು.

ADVERTISEMENT

ಇನ್ನುಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಮುಖಂಡರಾದ ಎಚ್‌.ಎಂ. ರೇವಣ್ಣ ಮತ್ತು ಸಿ.ಎಂ. ಇಬ್ರಾಹಿಂ ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಇಬ್ಬರಿಗೂ ಸೋಂಕಿನ ಅಲ್ಪಸ್ವಲ್ಪ ಲಕ್ಷಣಗಳಷ್ಟೆ ಕಾಣಿಸಿಕೊಂಡಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ರೇವಣ್ಣ ಚಿಕಿತ್ಸೆ ಪಡೆಯುತ್ತಿದ್ದು, ಸಿ.ಎಂ. ಇಬ್ರಾಹಿಂ ಅವರು ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಕೆಲವು ಕಠಿಣ ನಿರ್ಬಂಧಗಳನ್ನು ವಿಧಿಸಿದೆ. ಈ ಮಧ್ಯೆಯೇ, ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನ ಆಗ್ರಹಿಸಿ ಕಾಂಗ್ರೆಸ್ ನಾಯಕರು ಜ. 9ರಿಂದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದಾರೆ.

ಸೋಂಕು ಹೆಚ್ಚುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೆ ಕಾಂಗ್ರೆಸ್‌ ನಾಯಕರು ಪಾದಯಾತ್ರೆ ಮುಂದುವರಿಸಿದ್ದಾರೆ. ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವ ನಾಯಕರ ವಿರುದ್ಧ ಈಗಾಗಲೇ ಎಫ್​ಐಆರ್​ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.