ADVERTISEMENT

ರಾಮನಗರ| ಮನರೇಗಾ ಮುಂದುವರಿಸಲು ಆಗ್ರಹ: ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 4:57 IST
Last Updated 9 ಜನವರಿ 2026, 4:57 IST
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು, ಹಿಂದಿನ ಮನರೇಗಾ ಕಾಯ್ದೆಯನ್ನೇ ಮುಂದುವರೆಸಬೇಕು ಎಂದು ಒತ್ತಾಯಿಸಿ, ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಸದಸ್ಯರು ರಾಮನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು, ಹಿಂದಿನ ಮನರೇಗಾ ಕಾಯ್ದೆಯನ್ನೇ ಮುಂದುವರೆಸಬೇಕು ಎಂದು ಒತ್ತಾಯಿಸಿ, ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಸದಸ್ಯರು ರಾಮನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು   

ರಾಮನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಗೆ (ಎಂಜಿಎನ್‌ಆರ್‌ಇಜಿಎ: ಮನರೇಗಾ) ತಿದ್ದುಪಡಿ ತಂದು ವಿಬಿ ಜಿ ರಾಮ್ ಜಿ ಕಾಯ್ದೆ ಎಂದು ಮರು ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಸದಸ್ಯರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಘೋಷಣೆ ಕೂಗಿದ ಪ್ರತಿಭಟನಕಾರರು ಮನರೇಗಾ ಹೆಸರನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.

ಬಡವರ ಬದುಕಿಗೆ ಆಸರೆಯಾಗಿದ್ದ ಮನರೇಗಾ ಕಾಯ್ದೆಯನ್ನು ದುರ್ಬಲಗೊಳಿಸಿರುವ ಕೇಂದ್ರ ಸರ್ಕಾರ ಕಾರ್ಪೋರೇಟ್ ಲಾಬಿಗೆ ಮಣಿದು ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ನೂತನ ಕಾಯ್ದೆಯು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಿದೆ. ಇದು ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸುವ ಬದಲು, ದೊಡ್ಡ ನಗರಗಳು ಹಾಗೂ ಪಟ್ಟಣಗಳಿಗೆ ವಲಸೆ ಹೋಗುವಂತೆ ಮಾಡಲಿದೆ. ಗಾಂಧೀಜಿ ಅವರ ಗ್ರಾಮ ಸ್ವರಾಜ್ಯ ಕಲ್ಪನೆಗೆ ವಿರುದ್ಧವಾಗಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ಹೇಳಿದರು.

ಬಡ ಕೂಲಿ ಕಾರ್ಮಿಕರ ವಲಸೆ ತಪ್ಪಿಸುವುದಕ್ಕಾಗಿ 2005ರಲ್ಲಿ ಯುಪಿಎ ಸರ್ಕಾರವು ಮನರೇಗಾ ಕಾಯ್ದೆಯನ್ನು ಜಾರಿಗೆ ತಂದಿತ್ತು. ವಲಸೆ ತಡೆದು ಸಮಾನ ಕೂಲಿ ಒದಗಿಸಿ ಬಡವರಿಗೂ ಆರ್ಥಿಕ ಚೈತನ್ಯ ನೀಡುವ ಗ್ರಾಮ ಸ್ವರಾಜ್ಯದ ಆಶಯವನ್ನು ಕಾಯ್ದೆ ಹೊಂದಿತ್ತು. ಇದರಿಂದಾಗಿ ಗ್ರಾಮೀಣ ಭಾಗದ ಸಾವಿರಾರು ಕೆರೆ– ಕಟ್ಟೆಗಳು, ಕಾಲುವೆಗಳು ಅಭಿವೃದ್ಧಿಯಾಗಿದ್ದವು, ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗಿತ್ತು ಎಂದು ಹೇಳಿದರು.

ಕೇಂದ್ರ ಸರ್ಕಾರ ಈಗ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಯೋಜನೆಯು ಹಿಂದಿನ ಮನರೇಗಾ ಆಶಯಗಳಿಗೆ ತದ್ವಿರುದ್ಧವಾಗಿದೆ. ನೊಟಿಫೈ ಮಾಡಿದ ಪ್ರದೇಶಗಳಿಗಷ್ಟೇ ಅನುದಾನ ಮತ್ತು ಕೆಲಸ ಸಿಗಲಿದೆ. ಇದರಿಂದ ಕೆಲಸ ಕೇಳುವ ಹಕ್ಕು ಮತ್ತು ಬೇಡಿಕೆ ಸಂಪೂರ್ಣ ಕುಸಿಯಲಿದೆ. ಶೇ 60:40 ಅನುಪಾತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುದಾನ ನೀಡಬೇಕೆಂಬ ನಿಯಮ ಸೇರಿಸಲಾಗಿದೆ ಎಂದರು.

ಆರ್ಥಿಕ ಹಿನ್ನಡೆಯಲ್ಲಿರುವ ರಾಜ್ಯಗಳ ಬಳಿ ಶೇ 40ರಷ್ಟು ಅನುದಾನವಿಲ್ಲದೆ ಕೂಲಿ ಕಾರ್ಮಿಕರಿಗೆ ಕೆಲಸವೇ ಇಲ್ಲದಂತಾಗುತ್ತದೆ. ಇದರಿಂದ ಗ್ರಾಮೀಣಾಭಿವೃದ್ಧಿ ಕುಂಠಿತವಾಗಲಿದೆ. ಲಿಂಗ ಸಮಾನತೆ ಮತ್ತು ಸಮಾನ ಕೂಲಿಗೆ ದೊಡ್ಡ ಪೆಟ್ಟು ಬೀಳಲಿದೆ. ಗುತ್ತಿಗೆದಾರರಿಗೆ ನರೇಗಾ ಯೋಜನೆ ನಿಷೇಧಿಸಲಾಗಿತ್ತು. ಆದರೆ ಈಗ, ಗುತ್ತಿಗೆದಾರರಿಗೆ ಅವಕಾಶ ನೀಡಲಾಗಿದ್ದು, ಉಳ್ಳವರಿಗೆ ಅನುಕೂಲ ಮಾಡುವ ಯೋಜನೆ ಇದಾಗಿದೆ. ಹಾಗಾಗಿ ತಿದ್ದುಪಡಿ ಕಾಯ್ದೆ ರದ್ದುಪಡಿಸಬೇಕು ಎಂದರು.

ಸಂಘದ ರಾಜ್ಯ ಸಹಕಾರ್ಯದರ್ಶಿ ಬಿ. ಹನುಮೇಶ್, ಮಂಜುಳ, ಜಯಮ್ಮ, ಆನಂದ್, ರಮೇಶ್, ಕುಮಾರ್, ಅನುಕುಮಾರ್, ಲಕ್ಷ್ಮಿ, ಜ್ಯೋತಿ, ಅರುಣ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.