
ಮಾಗಡಿ: ‘ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಟಿಕೆಟ್ ಸಿಗದೆ ಹತಾಶರಾಗಿರುವ ಕೆ.ಎಸ್. ಈಶ್ವರಪ್ಪ ಅವರು, ನಾಲಿಗೆ ಮತ್ತು ಮಿದುಳಿನ ನಡುವೆ ಸಂಪರ್ಕ ಕಳೆದುಕೊಂಡಿದ್ದಾರೆ. ಅವರು ತಮ್ಮ ಘನತೆಗೆ ತಕ್ಕಂತೆ ಮಾತನಾಡಲಿ’ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ತಿರುಗೇಟು ನೀಡಿದರು.
‘ರಾಷ್ಟ್ರದ್ರೋಹ ಹೇಳಿಕೆ ನೀಡಿರುವ ಸಂಸದ ಡಿ.ಕೆ. ಸುರೇಶ್ ಅವರಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂಬ ಈಶ್ವರಪ್ಪ ಹೇಳಿಕೆ ಕುರಿತು ಶುಕ್ರವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಗುಂಡಿಕ್ಕಿ ಕೊಲ್ಲುವುದು ಅವರ ಸಂಸ್ಕೃತಿ. ಅದಕ್ಕೆ ಅಂತಹ ಹೇಳಿಕೆ ನೀಡಿದ್ದಾರೆ. ಆದರೆ, ಇಲ್ಯಾರೂ ಕೈಗೆ ಬಳೆ ತೊಟ್ಟುಕೊಂಡು ಕುಳಿತಿಲ್ಲ’ ಎಂದರು.
‘ಈಶ್ವರಪ್ಪ ಅವರು ಇನ್ನು ಮುಂದಾದರೂ ಸ್ವಲ್ಪ ಬುದ್ಧಿ ಕಲಿಯಲಿ. ಆ ಶ್ರೀ ರಾಮಚಂದ್ರ ಅವರಿಗೆ ಒಳ್ಳೆಯ ಬುದ್ಧಿ ಕೊಡಲಿ ಎಂದು ಕೇಳಿಕೊಳ್ಳುವೆ’ ಎಂದು ಹೇಳಿದರು.
‘ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಶ್ವಮೇಧದ ಕುದುರೆ ಬಿಟ್ಟಿದ್ದೇವೆ. ತಾಕತ್ತಿದ್ದವರು ಕಟ್ಟಿ ಹಾಕಲಿ ನೋಡೋಣ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.