ಚನ್ನಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು
ಚನ್ನಪಟ್ಟಣ: ಪಟ್ಟಣದ ಸಾತನೂರು ವೃತ್ತದ ಬಳಿಯ ಟಿಪ್ಪು ನಗರದಲ್ಲಿ ಭಾನುವಾರ ರಾತ್ರಿ ಮದುವೆ ಕಾರ್ಯಕ್ರಮದಲ್ಲಿ ಊಟ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆ, ಮಾಗಡಿ ಸರ್ಕಾರಿ ಆಸ್ಪತ್ರೆ, ರಾಮನಗರ ಜಿಲ್ಲಾಸ್ಪತ್ರೆ ಹಾಗೂ ಮಂಡ್ಯದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಥಮ ಚಿಕಿತ್ಸೆ ಜತೆಗೆ ಡ್ರಿಪ್ ಹಾಕಲಾಗಿದೆ. ಅಸ್ವಸ್ಥರಲ್ಲಿ ಮಕ್ಕಳೇ ಹೆಚ್ಚಾಗಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ 'ಪ್ರಜಾವಾಣಿ'ಗೆ ತಿಳಿಸಿದರು.
ಚನ್ನಪಟ್ಟಣದ ವಧು ಹಾಗೂ ಮಾಗಡಿಯ ವರನ ಮದುವೆ ಕಾರ್ಯಕ್ರಮ ಚನ್ನಪಟ್ಟಣದಲ್ಲಿ ನಡೆಯುತ್ತಿತ್ತು. ಮಧ್ಯಾಹ್ನ ಊಟದ ನಂತರ ಐಸ್ ಕ್ರೀಂ ಸೇವಿಸಿದ್ದರು. ಸಂಜೆ ಹೊತ್ತಿಗೆ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥರನ್ನು ಮಾಗಡಿ ಮತ್ತು ಚನ್ನಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಡ್ಯ ಮತ್ತು ರಾಮನಗರ ಜಿಲ್ಲಾಸ್ಪತ್ರೆಗೆ ನಾಲ್ಕೈದು ಮಂದಿಯನ್ನು ಕರೆದೊಯ್ಯಲು ಶಿಫಾರಸು ಮಾಡಲಾಗಿದೆ. ಮದುವೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಆಹಾರ ಮತ್ತು ಐಸ್ ಕ್ರೀಂ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ವರದಿ ಬಂದ ಬಳಿಕ ಕಾರಣ ಗೊತ್ತಾಗಲಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದರು.
ಅಸ್ವಸ್ಥರಾಗಿರುವವರು ಚನ್ನಪಟ್ಟಣದ ಯಾರಬ್ ನಗರ ಮತ್ತು ಕೋಟೆ ನಿವಾಸಿಗಳಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.