ADVERTISEMENT

ನ್ಯಾನೊ ಯೂರಿಯಾ ಬಳಕೆಗೆ ಉತ್ತೇಜನ: ಸಂಸದ ಡಾ. ಸಿ.ಎನ್. ಮಂಜುನಾಥ್

ರೈತರಲ್ಲಿ ಜಾಗೃತಿ ಮೂಡಿಸಲು ಸಂಸದ ಡಾ.ಮಂಜುನಾಥ್ ಸಲಹೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 2:30 IST
Last Updated 30 ಡಿಸೆಂಬರ್ 2025, 2:30 IST
ರಾಮನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಡಾ. ಸಿ.ಎನ್. ಮಂಜುನಾಥ್ ಮಾತನಾಡಿದರು. ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿ.ಪಂ. ಸಿಇಒ ಅನ್ಮೋಲ್ ಜೈನ್, ಉಪ ವಿಭಾಗಾಧಿಕಾರಿ ಬಿನೋಯ್ ಭಾಗವಹಿಸಿದ್ದರು
ರಾಮನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಡಾ. ಸಿ.ಎನ್. ಮಂಜುನಾಥ್ ಮಾತನಾಡಿದರು. ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿ.ಪಂ. ಸಿಇಒ ಅನ್ಮೋಲ್ ಜೈನ್, ಉಪ ವಿಭಾಗಾಧಿಕಾರಿ ಬಿನೋಯ್ ಭಾಗವಹಿಸಿದ್ದರು   

ರಾಮನಗರ: ಕೃಷಿಯಲ್ಲಿ ಮಹತ್ವದ ಪಾತ್ರ ವಹಿಸುವ ನ್ಯಾನೋ ಯೂರಿಯಾ ಗೊಬ್ಬರವನ್ನು ಜಿಲ್ಲೆಯ ರೈತರು ಬಳಸುವಂತೆ ಉತ್ತೇಜಿಸಲು ಕೃಷಿ ಇಲಾಖೆಯ ಅಧಿಕಾರಿಗಳು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಅವರು ಮಾತನಾಡಿದರು.

ನ್ಯಾನೋ ಯೂರಿಯಾ ಗೊಬ್ಬರ ಮಾಲಿನ್ಯ ತಡೆಯುತ್ತದೆ. 500 ಮಿಲಿ ಲೀಟರ್‌ ದ್ರವರೂಪದ ನ್ಯಾನೋ ಯೂರಿಯಾ 45 ಕೆ.ಜಿ ಘನ ಯೂರಿಯಾ ರಸಗೊಬ್ಬರಕ್ಕೆ ಸಮ. ಅದರ ಪ್ರಾಮುಖ್ಯತೆ, ಬಳಕೆ ವಿಧಾನದ ಕುರಿತು ಕಾರ್ಯಾಗಾರ, ಕರಪತ್ರ, ಪೋಸ್ಟರ್ ಮೂಲಕ  ಅರಿವು ಮೂಡಿಸಬೇಕು. ಕೇಂದ್ರ ಸರ್ಕಾರದ ಸಬ್ಸಿಡಿ ಬಗ್ಗೆ ತಿಳಿಸಬೇಕು ಎಂದರು.

ನ್ಯಾನೋ ಯೂರಿಯಾ ಬಳಕೆ ಬಗ್ಗೆ ದಿಶಾ ಸಮಿತಿ ಸದಸ್ಯರು ಹಾಗೂ ಜನಪ್ರತಿನಿಧಿಗಳು ಜಿಲ್ಲೆಯ ರೈತರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜೊತೆಗೆ ರೈತರು ಕೃಷಿ ಹೊಂಡ ಮುಚ್ಚುತ್ತಿರುವ ಬಗ್ಗೆ ದೂರು ಬಂದಿದ್ದು, ಕೃಷಿ ಹೊಂಡದಿಂದ ಆಗುವ ಲಾಭಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಲ್ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಜಿಲ್ಲೆಯ 1,528 ಕಾಮಗಾರಿಗಳ ಪೈಕಿ 895 ಕಾಮಗಾರಿಗಳು ಪೂರ್ಣಗೊಂಡಿವೆ. 556 ಕಾಮಗಾರಿಗಳು ಪ್ರಕ್ರಿಯೆಯಲ್ಲಿವೆ. ಜೆಜೆಎಂ ಕಾಮಗಾರಿ ಕುರಿತು ಚರ್ಚಿಸಲು ಹತ್ತು ದಿನದೊಳಗೆ ಪಿಡಿಒ ಹಾಗೂ ಗುತ್ತಿಗೆದಾರರ ಸಭೆ ಕರೆಯಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಸೂಚಿಸಿದರು.

ADVERTISEMENT

ಜಿಲ್ಲೆಯಲ್ಲಿ ಪ್ರತಿ ತಿಂಗಳು 1,500 ಲೀಟರ್ ನ್ಯಾನೋ ಯೂರಿಯಾ  ಬಳಕೆಯಾಗುತ್ತಿದೆ. ಬಳಕೆ ಪ್ರಮಾಣ ಹೆಚ್ಚಿಸಲು ರೈತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಹೇಳಿದರು.

ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಅನ್ಮೋಲ್ ಜೈನ್, ಉಪ ವಿಭಾಗಾಧಿಕಾರಿ ಬಿನೋಯ್, ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್, ಮುಖ್ಯ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ, ದಿಶಾ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಆಸ್ಪತ್ರೆ ಹಾಸಿಗೆ ಸಾಮರ್ಥ್ಯ ಹೆಚ್ಚಳ

ರಾಮನಗರದ ಅರ್ಚಕರಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು 650 ಹಾಸಿಗೆಗಳಿಗೆ ಏರಿಸುವ ಹಾಗೂ ಚನ್ನಪಟ್ಟಣದಲ್ಲಿ 200 ಹಾಸಿಗೆ ಸಾಮರ್ಥ್ಯದ ಹೊಸ ತಾಲ್ಲೂಕು ಆಸ್ಪತ್ರೆ ನಿರ್ಮಿಸುವ ಬಗ್ಗೆ ಸಂಸದ ಡಾ.ಮಂಜುನಾಥ್‌ ಸಭೆಯಲ್ಲಿ ಚರ್ಚಿಸಿದರು. ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆ ನೀಗಿರುವ ಮತ್ತು ಸಿಎಸ್‌ಆರ್ ನಿಧಿಯಡಿ ಜಿಲ್ಲೆಯಲ್ಲಿ ಕೊರೆಸಿರುವ ಬೋರ್‌ವೆಲ್ಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಫಲಾನುಭವಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.