
ಮಾಗಡಿ: ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಹಕಾರದ ಜತೆಗೆ ಸಲಹೆಗಳು ಅವಶ್ಯ. ನಾರಸಂದ್ರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇಂದು ಅಂದಾಜು ₹4 ಕೋಟಿ ವೆಚ್ಚದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಕೆಲ ಕಾಮಗಾರಿಗಳನ್ನು ಉದ್ಘಾಟಿಸಲಾಗಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.
ತಾಲ್ಲೂಕಿನ ನಾರಸಂದ್ರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದಮ್ಮನಕಟ್ಟೆ ಗ್ರಾಮದಲ್ಲಿ ನೂತನ ಅಂಗನವಾಡಿ ಉದ್ಘಾಟನೆ, ಕೆಂಪಯ್ಯನಪಾಳ್ಯದಲ್ಲಿ ಕಾಂಕ್ರೀಟ್ ರಸ್ತೆ, ಮರೂರು ಗ್ರಾಮದಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದೆ ಈ ಭಾಗದಲ್ಲಿ ಚಾಲನೆ ನೀಡಿದ್ದ ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು.
ತಾಲ್ಲೂಕಿನ ಕೆಲ ಕಾಂಗ್ರೆಸ್ ಮುಖಂಡರು ಪಕ್ಷ ತೊರೆಯುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪುರಸಭೆ ಮತ್ತು ಇತರ ಸ್ಥಾನಗಳಿಗೆ ಕೆಲವರು ಒತ್ತಡ ಹೇರಿದ್ದರು. ಆದರೆ, ಜನಮನ್ನಣೆ ಪಡೆದು ಕೈಗೊಳ್ಳುವ ತೀರ್ಮಾನ ಮಾಡಿದ್ದರಿಂದ ಅವರು ಪಕ್ಷ ತೊರೆದಿದ್ದಾರೆ ಎಂದರು.
ನರೇಗಾ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವು ಗ್ರಾಮೀಣ ಭಾಗದ ಜನರ ಮೇಲೆ ನೇರವಾಗಿ ಪರಿಣಾಮ ಬೀರುತ್ತಿದೆ. ಹಿಂದೆ ನರೇಗಾ ಯೋಜನೆಯಲ್ಲಿ ವೈಯಕ್ತಿಕ ಮತ್ತು ಸಾಮೂಹಿಕ ಕಾಮಗಾರಿಗಳಿಂದ ಗ್ರಾಮಗಳ ಅಭಿವೃದ್ಧಿಯ ಜೊತೆಗೆ, ಆರ್ಥಿಕವಾಗಿಯೂ ಅನುಕೂಲವಾಗುತ್ತಿತ್ತು. ಈಗಿನ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆಂಚೇಗೌಡ, ಮುಖಂಡರಾದ ಮರೂರು ವೆಂಕಟೇಶ್, ಮರಿಗೌಡ, ತಿಪ್ಪಸಂದ್ರ ವೆಂಕಟೇಶ್, ಬಾಬಣ್ಣ, ನಾಗರಾಜು ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.