ADVERTISEMENT

ಸಾವನದುರ್ಗ: 3 ಕಲ್ಯಾಣ ಮಂಟಪಗಳಿಗೆ ಬೀಗ ಜಡಿದ ಅಧಿಕಾರಿಗಳು, ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 3:34 IST
Last Updated 19 ಏಪ್ರಿಲ್ 2021, 3:34 IST
ಮಾಗಡಿ ತಾಲ್ಲೂಕಿನ ಸಾವನದುರ್ಗದಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಕಲ್ಯಾಣ ಮಂಟಪ
ಮಾಗಡಿ ತಾಲ್ಲೂಕಿನ ಸಾವನದುರ್ಗದಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಕಲ್ಯಾಣ ಮಂಟಪ   

ಮಾಗಡಿ: ತಾಲ್ಲೂಕಿನ ಸಾವನದುರ್ಗದಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಮೂರು ಕಲ್ಯಾಣ ಮಂಟಪಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.

ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯದೆ ಮದುವೆ ಕಾರ್ಯಕ್ರಮದಲ್ಲಿ ಹೆಚ್ಚು ಜನರನ್ನು ಸೇರಿಸಲಾಗಿತ್ತು. ಸುದ್ದಿ ತಿಳಿದ ಕೂಡಲೇ ಪಿಎಸ್‌ಐ ಶ್ರೀಕಾಂತ್‌, ಮಾಡಬಾಳ್‌ ರಾಜಸ್ವ ನಿರೀಕ್ಷಕ ವೆಂಕಟೇಶ್‌, ಹಂಚಿಕುಪ್ಪೆ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್‌ ಕುಮಾರ್‌ ನೇತೃತ್ವದ ಅಧಿಕಾರಿಗಳ ತಂಡ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣ ಮಂಟಪ, ಆರ್‌.ಎನ್‌.ಆರ್‌ ಕಲ್ಯಾಣ ಮಂಟಪ, ಎಸ್‌ಎಲ್‌ಎನ್‌ ಕಲ್ಯಾಣ ಮಂಟಪಗಳಿಗೆ ತೆರಳಿ ತಪಾಸಣೆ ನಡೆಸಿದರು.

ಕೊರೊನಾ ಸೋಂಕು ಹರಡುತ್ತಿ ರುವ ಸಂಕಟದ ಸಮಯದಲ್ಲೂ ಹೆಚ್ಚು ಜನರನ್ನು ಸೇರಿಸಲಾಗಿತ್ತು. ಕಲ್ಯಾಣ ಮಂಟಪಗಳ ಮಾಲೀಕರು ಮತ್ತು ವ್ಯವಸ್ಥಾಪಕರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಕಲ್ಯಾಣ ಮಂಟಪಗಳಿವೆ ಬೀಗ ಹಾಕಲಾಗಿದೆ. ಕೋವಿಡ್‌ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌ ಆದೇಶಿಸಿದ್ದಾರೆ.

ADVERTISEMENT

‘ಸಾರ್ವಜನಿಕರು ಗುಂಪು ಗೂಡುವುದು, ಜಾತ್ರೆ, ಹಬ್ಬ, ಉತ್ಸವ, ಮದುವೆ ಮಾಡುವಾಗ ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆಯಬೇಕು. ಕೋವಿಡ್‌ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕರು ಸಹಕರಿಸಬೇಕು’ ಎಂದು ಪಿಎಸ್‌ಐ ಶ್ರೀಕಾಂತ್‌ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.