ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ವಿಎಸ್ಎಸ್ಎನ್ಗೆ ನಡೆದ ಚುನಾವಣೆಯಲ್ಲಿ ಕೊಕ್ಕರೆಹೊಸಳ್ಳಿ ವೆಂಕಟೇಶ್ ಅಧ್ಯಕ್ಷರಾಗಿ ಮತ್ತು ಕುಡಿಗಾಣಲಿದೊಡ್ಡಿ ಶಿವರುದ್ರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷರಾಗಿದ್ದ ಕೆ.ಟಿ. ಕೆಂಚೇಗೌಡ ಮತ್ತು ಉಪಾಧ್ಯಕ್ಷ ಬೋಳಮಾದಯ್ಯ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ಮಹಮ್ಮದ್ ನದೀಂ ಗುರುವಾರ ಚುನಾವಣೆ ನಡೆಸಿದರು.
ಎರಡೂ ಸ್ಥಾನಗಳಿಗೂ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಅವರು ಅವಿರೋಧ ಆಯ್ಕೆ ಘೋಷಿಸಿದರು.
ಕೋಡಿಹಳ್ಳಿ ಸೊಸೈಟಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಮನಂಜೇಗೌಡ, ಮಾಜಿ ಸಿಇಒ ಕೆ. ಮಲ್ಲೇಶ್ ಸೇರಿದಂತೆ ನಿರ್ದೇಶಕರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್. ಬಸಪ್ಪ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರಾದ ಕೆ.ಎಂ. ರಾಜೇಂದ್ರ, ಮುನಿಹುಚ್ಚೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಶಿವರಾಜು ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ಕೋಡಿಹಳ್ಳಿ ವಿಎಸ್ಎಸ್ಎನ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಲಾಭಾಂಶದಲ್ಲಿ ನಡೆಯುತ್ತಿದೆ ಎಂದರು.
ಅಧ್ಯಕ್ಷ, ಉಪಾಧ್ಯಕ್ಷರು ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೊಸೈಟಿ ಅಭಿವೃದ್ಧಿಗೆ ಶ್ರಮಿಸಬೇಕು. ಸೊಸೈಟಿ ವ್ಯಾಪ್ತಿಯಲ್ಲಿ ಬರುವ ರೈತರಿಗೆ ಅನುಕೂಲವಾಗುವಂತೆ ಕಾರ್ಯಕ್ರಮ ರೂಪಿಸಬೇಕು. ಕೃಷಿ ಸಾಲ, ಬೆಳೆ ಸಾಲ ಪಡೆಯಲು ಯಾರು ಅರ್ಹರಿರುತ್ತಾರೋ ಅವರನ್ನು ಗುರುತಿಸಿ ಹೊಸ ಸಾಲ ನೀಡಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎಂ. ಮಾದೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಪ್ರಕಾಶ್, ಉಪಾಧ್ಯಕ್ಷ ಷಣ್ಮುಕಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.