ADVERTISEMENT

ರಾಮನಗರ | ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಬಿಜೆಪಿ–ಜೆಡಿಎಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 7:56 IST
Last Updated 29 ಫೆಬ್ರುವರಿ 2024, 7:56 IST
ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ, ಬಿಜೆಪಿ– ಜೆಡಿಎಸ್ ಕಾರ್ಯಕರ್ತರು ರಾಮನಗರದ ಐಜೂರು ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು
ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ, ಬಿಜೆಪಿ– ಜೆಡಿಎಸ್ ಕಾರ್ಯಕರ್ತರು ರಾಮನಗರದ ಐಜೂರು ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು   

ರಾಮನಗರ: ರಾಜ್ಯಸಭಾ ಚುನಾವಣಾ ಫಲಿತಾಂಶದ ಸಂದರ್ಭದಲ್ಲಿ ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ, ಬಿಜೆಪಿ– ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಗರದ ಐಜೂರು ವೃತ್ತದಲ್ಲಿ ಬೆಳಿಗ್ಗೆ ಜಮಾಯಿಸಿದ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು, ಬೆಂಗಳೂರು–ಮೈಸೂರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ನೂತನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್, ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಮಾತನಾಡಿದ ಬಿಜೆಪಿ ನಗರ ಮಂಡಲ ಅಧ್ಯಕ್ಷ ದರ್ಶನ್,  ‘ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ತಮ್ಮನ್ನು ಪ್ರಶ್ನಿಸಲು ಬಂದ ಮಾಧ್ಯಮದವರನ್ನು ನಿಂದಿಸಿರುವುದು ತಪ್ಪು. ಅವರು ಮಾಧ್ಯಮದವರನ್ನು ಕ್ಷಮೆ ಕೋರಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬುದಕ್ಕೆ ಇದು ಸಾಕ್ಷಿ. ಘೋಷಣೆ ಕೂಗಿದವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ರಾಮನಗರ ಗ್ರಾಮಾಂತರ ಮಂಡಲ ಅಧ್ಯಕ್ಷ ಜಗದೀಶ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ, ಎಸ್‌ಸಿ ಮೋರ್ಚಾ ಅಧ್ಯಕ್ಷ ಚಂದ್ರು, ಕನಕಪುರ ಗ್ರಾಮಾಂತರ ಅಧ್ಯಕ್ಷ ಮುರುಳಿ, ಪದ್ಮನಾಭ್, ಚಂದ್ರಶೇಖರರೆಡ್ಡಿ, ಎಸ್.ಆರ್. ನಾಗರಾಜು, ಕಾಳಯ್ಯ, ದಿನೇಶ್, ರುದ್ರದೇವರು, ರಾಜು, ಶಿವಾನಂದ್, ನಾಗೇಶ್, ಧಮೇಂದ್ರ, ಬಸವರಾಜು, ಜಯರಾಂ, ಮಂಜು, ಜೆಡಿಎಸ್‌ನ ಮಂಜುನಾಥ್, ಗೂಳಿಗೌಡ, ಜಯಕುಮಾರ್, ಕೆಂಪರಾಜು ಹಾಗೂ ಸುರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.