ರಾಮನಗರ: ಅಯೋಧ್ಯೆ ರಾಮಮಂದಿರ ವಿವಾದದ ತೀರ್ಪನ್ನು ಸುಪ್ರೀಂ ಕೋರ್ಟ್ ಶನಿವಾರ ಪ್ರಕಟಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ಸಂಭವಿಸಲಿಲ್ಲ.
ಶುಕ್ರವಾರ ರಾತ್ರಿಯಿಂದಲೇ ಪೊಲೀಸರು ಪಹರೆ ಹೆಚ್ಚಿಸಿದ್ದರು. ಕೆಎಸ್ಆರ್ಪಿ, ಡಿಎಆರ್ ತುಕಡಿಗಳನ್ನು ಆಯಾಕಟ್ಟಿನ ಸ್ಥಳಗಳಲ್ಲಿ ನಿಯೋಜನೆ ಮಾಡಲಾಗಿತ್ತು. ಪ್ರತಿಭಟನೆ, ವಿಜಯೋತ್ಸವಗಳಿಗೆ ನಿರ್ಬಂಧ ಹೇರಲಾಗಿತ್ತು. ಸರ್ಕಾರವು ಶನಿವಾರ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತ್ತು. ಎರಡನೇ ಶನಿವಾರದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಿಗೆ ರಜೆ ಇತ್ತು. ಜನಜೀವನ ಎಂದಿನಂತೆ ಇದ್ದು, ವ್ಯಾಪಾರ ವಹಿವಾಟಿಗೂ ಯಾವುದೇ ತೊಂದರೆ ಆಗಲಿಲ್ಲ.
ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಜಾಲತಾಣಗಳಲ್ಲೂ ಈ ವಿಚಾರವಾಗಿ ಅಹಿತರಕರ ಚರ್ಚೆ ನಡೆಯಲಿಲ್ಲ. ‘ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವಂತಹ ಸಂದೇಶಗಳನ್ನು ಕಳುಹಿಸಬಾರದು. ಪ್ರಚೋದನಕಾರಿ ಹೇಳಿಕೆಗಳು ಹರಿದಾಡಿದರೆ, ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.