ADVERTISEMENT

‘ಜನಸಂಖ್ಯೆ ನಿಯಂತ್ರಣ: ಅರಿವು ಅಗತ್ಯ’

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 19:43 IST
Last Updated 18 ಜುಲೈ 2019, 19:43 IST
ಜನಸಂಖ್ಯೆ ನಿಯಂತ್ರಣ ಜಾಗೃತಿ ಜಾಥಾಕ್ಕೆ ಗುರುವಾರ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಎಸ್.ಕುಲಕರ್ಣಿ ಚಾಲನೆ ನೀಡಿದರು
ಜನಸಂಖ್ಯೆ ನಿಯಂತ್ರಣ ಜಾಗೃತಿ ಜಾಥಾಕ್ಕೆ ಗುರುವಾರ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಎಸ್.ಕುಲಕರ್ಣಿ ಚಾಲನೆ ನೀಡಿದರು   

ರಾಮನಗರ: ‘ಜನಸಂಖ್ಯೆ ನಿಯಂತ್ರಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯ’ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಎಸ್. ಕುಲಕರ್ಣಿ ಹೇಳಿದರು.

ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಗುರುವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನಸಂಖ್ಯಾ ಸ್ಫೋಟಕ್ಕೆ ಮುಖ್ಯ ಕಾರಣ ನಿರುದ್ಯೋಗ, ಬಡತನ , ಅನಕ್ಷರತೆಯಾಗಿದೆ. ಇದನ್ನು ನಿಯಂತ್ರಿಸಲು ಜನರಿಗೆ ಅರಿವು ಮೂಡಿಸುವ ಕಾರ್ಯ ನಡೆಯಬೇಕಾಗಿದೆ. ಗಂಡಾಗಲಿ, ಹೆಣ್ಣಾಗಲಿ ಒಂದು ಮಗು ಸಾಕು ಎಂದು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸುವಂತೆ ಸೂಚಿಸಿದರು.

ಮದುವೆಗೆ ಸೂಕ್ತ ವಯಸ್ಸು ಗಂಡಿಗೆ 21ವರ್ಷ, ಹೆಣ್ಣಿಗೆ 18 ವರ್ಷ. ಆದರೆ ಸಮಾಜದಲ್ಲಿ ಬಾಲ್ಯವಿವಾಹಗಳು ನಡೆಯುತ್ತಿರುವುದು ಕೂಡ ಜನಸಂಖ್ಯಾ ಸ್ಫೋಟಕ್ಕೆ ಒಂದು ಪ್ರಮುಖ ಕಾರಣ, ಬಾಲ್ಯ ವಿವಾಹವನ್ನು ತಡೆಯಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಬಿ.ವೆಂಕಟಪ್ಪ ಮಾತನಾಡಿ, ಭಾರತದ ಜನಸಂಖ್ಯೆ ಇಂದು 130 ಕೋಟಿಗೂ ಅಧಿಕವಾಗಿದೆ, ಜನಸಂಖ್ಯಾ ಸ್ಫೋಟಕ್ಕೆ ಮುಖ್ಯ ಕಾರಣ ಅನಕ್ಷರತೆ. ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಸಂಬಂಧಿಸಿದಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಾಣಕಲ್ ನಟರಾಜ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಅರುಣ್ ಕುಮಾರ್, ಜಿಲ್ಲಾ ಆರ್ ಸಿಎಚ್.ಅಧಿಕಾರಿ ಡಾ.ಪದ್ಮಾ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಮಂಜುನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಪ್ರಾಚಾರ್ಯೆ ಡಾ.ಮಂಜುಳಾ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಕೇಂದ್ರದ ಪ್ರಾಚಾರ್ಯೆ ಕೆ.ಹರಿಣಾಕ್ಷಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಪ್ರಸನ್ನಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಎಂ. ದಕ್ಷಿಣಮೂರ್ತಿ ಇದ್ದರು.

ಆರೋಗ್ಯ ಪರಿವೀಕ್ಷಕ ಬಿ.ಎಸ್. ಗಂಗಾಧರ್ ಸ್ವಾಗತಿಸಿದರು, ಎಸ್. ಪದ್ಮ ರೇಖಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.