
ರಾಮನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತರಬೇತಿ ಕಾರ್ಯಗಾರವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್. ಮಂಜು ಉದ್ಘಾಟಿಸಿದರು.
ರಾಮನಗರ: ‘ಸೂಕ್ಷ್ಮಮತಿಗಳಾದ ಮಕ್ಕಳನ್ನು ಅರ್ಥೈಸಿಕೊಂಡು ಅವರ ಮೇಲೆ ನಿಗಾ ಇರಿಸಬೇಕು. ಅವರಲ್ಲೇನಾದರೂ ಸಮಸ್ಯೆ ಕಂಡುಬಂದರೆ ಪರಿಹರಿಸಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆಯುವಂತೆ ಪ್ರೋತ್ಸಾಹಿಸುವ ಜೊತೆಗೆ ಅವರ ಹಕ್ಕುಗಳು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್. ಮಂಜು ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟದಕ ಸಹಯೋಗದೊಂದಿಗೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಸೋಮವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ಕ್ರಮ ವಹಿಸಬೇಕು. 18 ವರ್ಷದೊಳಗಿನ ಮಕ್ಕಳ ಮಾಹಿತಿ ಪಡೆದು, ಯಾರಾದರೂ ಶಾಲೆಯಿಂದ ಹೊರಗುಳಿದಿದ್ದರೆ ಮರಳಿ ಶಾಲೆಗೆ ದಾಖಲಿಸಬೇಕು. ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಬೇಕು’ ಎಂದು ಸಲಹೆ ನೀಡಿದರು.
‘ಆರ್ಟಿಇ, ಪೋಕ್ಸೊ, ಬಾಲನ್ಯಾಯ ಕಾಯ್ದೆ (ಮಕ್ಕಳ ರಕ್ಷಣೆ ಮತ್ತು ಪೋಷಣೆ) ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಕುರಿತು ವ್ಯಾಪಕವಾಗಿ ಅರಿವು ಮೂಡಿಸಬೇಕು. 18 ವರ್ಷದೊಳಗಿನ ಮಕ್ಕಳು ಹಾಗೂ ಅಂಗವಿಕಲ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು, ಯೋಜನೆಗಳು ಹಾಗೂ ಹಕ್ಕುಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು’ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತಾ ಪಿ.ಆರ್ ಮಾತನಾಡಿ, ‘ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗದಂತೆ ನಿಗಾ ವಹಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ. ವಲಸೆ ಬಂದವರ ಮಕ್ಕಳೂ ಶಿಕ್ಷಣದಿಂದ ವಂಚಿತರಾಗದಂತೆ ಕ್ರಮ ವಹಿಸಬೇಕು’ ಎಂದು ತಿಳಿಸಿದರು.
‘ಗ್ರಾಮ ಮಟ್ಟದ ಅಧಿಕಾರಿಗಳಿಗೆ ಮಕ್ಕಳ ಸುರಕ್ಷತೆ ಬಗ್ಗೆ ಜವಾಬ್ದಾರಿಗಳಿರುತ್ತದೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತರೆ ಮಕ್ಕಳ ಹಕ್ಕುಗಳ ರಕ್ಷಣೆ ಸಾಧ್ಯವಾಗುವುದಿಲ್ಲ. ಅಧಿಕಾರಿಗಳು ಶಾಲಾ-ಕಾಲೇಜು, ಆಸ್ಪತ್ರೆ, ವಸತಿ ನಿಲಯಗಳು, ಇಟ್ಟಿಗೆ ಪ್ಯಾಕ್ಟರಿಗಳಿಗೆ ಭೇಟಿ ನೀಡಿ ಹಕ್ಕುಗಳು ಉಲ್ಲಂಘನೆಯಾಗುತ್ತಿದೆಯೇ ಎಂದು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶಿವಕುಮಾರ್, ಬಾಲನ್ಯಾಯ ಮಂಡಳಿಯ ಸದಸ್ಯ ಕಾರ್ಯದರ್ಶಿ ಶಂಕರಪ್ಪ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಲಕ್ಷ್ಮಿ ಪ್ರಸನ್ನ ಉಪನ್ಯಾಸ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ದಿನೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಕುಮಾರ್, ಆರ್ಸಿಎಚ್ ಅಧಿಕಾರಿ ಡಾ. ರಾಜು, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಅಧಿಕಾರಿ ಬಿಲಾಲ್, ಕಾರ್ಮಿಕ ಅಧಿಕಾರಿ ನಾಗೇಂದ್ರ, ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಜಿ.ಪಿ. ರಮೇಶ್, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಅಧಿಕಾರಿ ರಜನಿ ಇದ್ದರು. ಕಾರ್ಯಾಗಾರದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಶಾಲೆಗೆ ಗೈರಾಗುವವರ ಮೇಲೆ ನಿಗಾ ವಹಿಸಿ
‘ಆರು ವರ್ಷದೊಳಗಿನ ಅಂಗನವಾಡಿ ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶವುಳ್ಳ ಆಹಾರವನ್ನು ನೀಡಿದರೆ, ಅವರ ಭವಿಷ್ಯಕ್ಕೆ ಭದ್ರ ಬುನಾದಿ ನೀಡಿದಂತಾಗುತ್ತದೆ. ಆದ್ದರಿಂದ, ಎಲ್ಲಾ ಮಕ್ಕಳಿಗೂ ಉತ್ತಮ ಪೌಷ್ಠಿಕಾಂಶವುಳ್ಳ ಆಹಾರವನ್ನು ಕಡ್ಡಾಯವಾಗಿ ನೀಡಬೇಕು. ಶಿಕ್ಷಣ ಪಡೆಯುತ್ತಿರುವ ಎಲ್ಲಾ ಮಕ್ಕಳ ಮೇಲೆ ನಿಗಾ ವಹಿಸಬೇಕು. ಶಾಲೆಗೆ ಗೈರು ಹಾಜರಾಗುತ್ತಿರುವ ಮಕ್ಕಳ ಮೇಲೆ ಗಮನಹರಿಸಿ, ಅವರನ್ನು ಶಾಲೆಗೆ ವಾಪಸ್ ತರುವಂತಹ ಕೆಲಸಗಳನ್ನು ಮಾಡಬೇಕು. ಆ ಮೂಲಕ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸವಿತಾ ಪಿ.ಆರ್ ಸೂಚಿಸಿದರು.
ಮಕ್ಕಳ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಜೊತೆಗೆ ಅವರ ಸಮಗ್ರ ಬೆಳವಣಿಗೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮಾಜದ ಮುಖ್ಯವಾಹಿನಿಯಲ್ಲಿ ಮಕ್ಕಳು ಗುರುತಿಸಿಕೊಳ್ಳುವಂತೆ ಮಾಡಬೇಕು–ಬಿ.ಎಂ. ನಾಗರತ್ನ, ಅಧ್ಯಕ್ಷೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಬೆಂಗಳೂರು ದಕ್ಷಿಣ ಜಿಲ್ಲೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.