ಚನ್ನಪಟ್ಟಣ: ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳಲ್ಲಿ ಗೆಲುವು ತಂದುಕೊಡುವ ಉದ್ದೇಶದಿಂದ ಏ.30ರಂದು ಚನ್ನಪಟ್ಟಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ತಿಳಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತಾಲ್ಲೂಕಿನ ಮತ್ತೀಕೆರೆ ಬಳಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವ ಸಂಪುಟದ ಸಚಿವರು ಭಾಗವಹಿಸಲಿದ್ದಾರೆ. ರಾಮನಗರ ಹಾಗೂ ಮಂಡ್ಯ ಜಿಲ್ಲೆ ಎರಡು ಲಕ್ಷಕ್ಕೂ ಅಧಿಕ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪ್ರಧಾನಿ ಹೆಲಿಕಾಪ್ಟರ್ನಲ್ಲಿ ನಗರದ ಹೊರವಲಯದ ಪೊಲೀಸ್ ತರಬೇತಿ ಕೇಂದ್ರಕ್ಕೆ ಅಂದು ಮಧ್ಯಾಹ್ನ 2ಕ್ಕೆ ಆಗಮಿಸಿ ನೇರವಾಗಿ ವೇದಿಕೆ ಕಾರ್ಯಕ್ರಮಕ್ಕೆ ತೆರಳಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೊದಲು ಕೋಲಾರ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಚನ್ನಪಟ್ಟಣ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ನಂತರ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆ ಆರಂಭಿಸಲಾಗಿದೆ. ಕಾರ್ಯಕ್ರಮ ಯಶಸ್ಸಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯ ದೆಹಲಿ ಪ್ರತಿನಿಧಿ ಅರವಿಂದ್ ಗರ್ಗರ್, ಬಿಜೆಪಿ ಬೆಂಗಳೂರು ಗ್ರಾಮಾಂತರ ವಿಭಾಗೀಯ ಸಂಘಟನಾ ಪ್ರಭಾರಿ ಕೇಶವ ಪ್ರಸಾದ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಟಿ.ಜಯರಾಮು, ನಗರ ಘಟಕ ಅಧ್ಯಕ್ಷ ಶಿವಕುಮಾರ್, ಬಮೂಲ್ ನಾಮಿನಿ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.