
ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಮೆಣಸಿಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ವಿಲೀನ ಮಾಡುವ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ನಿರ್ಧಾರ ಖಂಡಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘದ (ಎಐಡಿಎಸ್ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು, ಪೋಷಕರು ಸೋಮವಾರ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು.
ಅರಳಾಳುಸಂದ್ರ ಕೆಪಿಎಸ್ ಶಾಲೆಗೆ ಸುತ್ತಮುತ್ತಲ ಮೂರು ಗ್ರಾಮಗಳ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ವಿಲೀನ ಮಾಡುವ ನಿರ್ಧಾರ ಮಾಡಲಾಗಿದೆ. ಗ್ರಾಮದ ಸರ್ಕಾರಿ ಶಾಲೆ ಮುಚ್ಚಲು ಅವಕಾಶ ನೀಡುವುದಿಲ್ಲ. ಗ್ರಾಮದ ವಿದ್ಯಾರ್ಥಿಗಳು ಈ ಶಾಲೆಯಲ್ಲಿಯೆ ಕಲಿಯಲಿ ಎಂದು ಪೋಷಕರು ಆಗ್ರಹಿಸಿದರು.
ರಾಜ್ಯದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳ ವಿಲೀನ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಹುನ್ನಾರ ನಡೆಸುತ್ತಿದೆ. ರಾಜ್ಯದ ಯಾವ ಭಾಗದಲ್ಲಿಯೂ ಸರ್ಕಾರಿ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ. ಸರ್ಕಾರಿ ಶಾಲೆಗಳು ಎಲ್ಲರ ಹಕ್ಕು ಎಂದು ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷೆ ಅಪೂರ್ವ ಎಚ್ಚರಿಕೆ ನೀಡಿದರು.
ಸರ್ಕಾರಿ ಶಾಲೆಗಳನ್ನು ಮುಚ್ಚಿ ಮ್ಯಾಗ್ನೆಟ್ ಶಾಲೆಗಳನ್ನು ಅಸ್ತಿತ್ವಕ್ಕೆ ತಂದರೆ ಮುಂದೆ ಮಕ್ಕಳಿಗೆ ಶಿಕ್ಷಣ ಕನಸಿನ ಮಾತಾಗುತ್ತದೆ. ವಿಲೀನ ಯೋಜನೆಯನ್ನು ಜಾರಿಗೆ ತಂದು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸಂಘಟನೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಸಂಚಾಲಕ ರೋಹಿತ್ ಎಚ್ಚರಿಕೆ ನೀಡಿದರು.
ಗ್ರಾಮದ ಬಸಲಿಂಗೇಗೌಡ, ವೆಂಕಟೇಶ್, ಮೌಲ್ಯ, ಜೈಸಿದ್ದು, ಗವಿ ಗೌಡ, ರಾಜಣ್ಣ, ಎಂ.ಎಸ್. ರಾಜು, ಶಿವಣ್ಣ, ಸಾಕಮ್ಮ, ಸಂಘಟನೆ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.