ರಾಮನಗರ: ಗುಂಡ್ಲುಪೇಟೆಯಲ್ಲಿ ದಲಿತ ಯುವಕನ ಮೇಲಾದ ದೌರ್ಜನ್ಯ ಖಂಡಿಸಿ ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಇಲ್ಲಿನ ಐಜೂರು ವೃತ್ತದಲ್ಲಿ ಹೆದ್ದಾರಿ ತಡೆದು ಬುಧವಾರ ಪ್ರತಿಭಟನೆ ನಡೆಸಿದರು.
ದಲಿತರ ಮೂಕ ರೋದನೆಯನ್ನು ವ್ಯಕ್ತಪಡಿಸಲು ಪ್ರತಿಭಟನೆಯಲ್ಲಿ ಹಸುವನ್ನು ಕರೆತಂದಿದ್ದರು. ಐಜೂರು ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡಿತು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಕಾರ್ಯಕರ್ತರು, ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಅಲ್ಲಿಂದ ಮೆರವಣಿಗೆ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ದೇವಸ್ಥಾನದಲ್ಲಿ ವಿಶ್ರಾಂತಿಗಾಗಿ ಕುಳಿತಿದ್ದ ಎಸ್. ಪ್ರತಾಪ್ ನಿಂದ ದೇವಸ್ಥಾನ ಅಪವಿತ್ರವಾಗಿದೆ ಎಂದು ಆರೋಪಿಸಿದ ಪೂಜಾರಿಯು ಸ್ಥಳೀಯರನ್ನು ಕರೆಯಿಸಿ ಪ್ರತಾಪ್ ನನ್ನು ಥಳಿಸಿದ್ದಾರೆ. ದಲಿತ ಎಂಬ ಕಾರಣಕ್ಕೆ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ ಎಂದು ಅಂಬೇಡ್ಕರ್ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪ್ರಸನ್ನ ತಿಳಿಸಿದರು.
ಈ ಕೃತ್ಯ ಖಂಡನಾರ್ಹ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ. ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ದಲಿತರಿಗೆ ಸಂವಿಧಾನಿಕ ಹಕ್ಕು ಮತ್ತು ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅಂಬೇಡ್ಕರ್ ಸೇನೆಯ ಪದಾಧಿಕಾರಿಗಳಾದ ರವಿಕುಮಾರ, ಶಿವಕುಮಾರ, ಕೃಷ್ಣಮೂರ್ತಿ, ನಾಗರಾಜ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.