ಚನ್ನಪಟ್ಟಣ: ಕೇಂದ್ರ ಸರ್ಕಾರ ವಿದೇಶದಿಂದ ಸುಂಕ ರಹಿತ ಹಾಲು ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿರುವುದನ್ನು ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಕಾವೇರಿ ವೃತ್ತದಲ್ಲಿ ಹಾಲು ಕಾಯಿಸಿ ಸಾರ್ವಜನಿಕರಿಗೆ ಉಚಿತವಾಗಿ ನೀಡುವ ಮೂಲಕ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಈ ಯೋಚನೆ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದರು.
ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಮುಕ್ತ ವ್ಯಾಪಾರ ಒಪ್ಪಂದದಡಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಹೊರದೇಶಗಳಿಂದ ಆಮದು ಮಾಡಿಕೊಂಡರೆ ದೇಶದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಈ ನಡೆಯಿಂದ ದೇಶದ ಹೈನುಗಾರಿಕೆ ಮೇಲೆ ಅದರಲ್ಲೂ ವಿಶೇಷವಾಗಿ ಗುಜರಾತ್ ಹಾಗೂ ಕರ್ನಾಟಕದ ಮೇಲೆ ದೊಡ್ಡ ವ್ಯತಿರಿಕ್ತ ಪರಿಣಾಮ ಬೀರಲಿದೆ. ಕೆ.ಎಂ.ಎಫ್ ಹೊರತಾಗಿಯೂ ಖಾಸಗಿ ಡೈರಿಗಳು ಹಾಗೂ ನೇರವಾಗಿ ಗ್ರಾಹಕರ ಮನೆಗಳಿಗೆ ಹಾಲು ತಲುಪಿಸುವ ಲಕ್ಷಾಂತರ ಜನರು ಹೈನುಗಾರಿಕೆಯನ್ನೇ ನೆಚ್ಚಿಕೊಂಡಿದ್ದಾರೆ. ಕೇಂದ್ರ ಸರ್ಕಾರ ವಿದೇಶಿ ಹಾಲು ಆಮದು ಮಾಡಿಕೊಳ್ಳಲು ಅನುಮತಿ ನೀಡಿದರೆ ಲಕ್ಷಾಂತರ ಜನರ ಬದುಕು ಬೀದಿಗೆ ಬೀಳಲಿದೆ ಎಂದರು.
ಪ್ರತಿಭಟನೆಯಲ್ಲಿ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಬೇವೂರು ಯೋಗೀಶ್ ಗೌಡ, ತಾಲ್ಲೂಕು ಅಧ್ಯಕ್ಷ ಭೂಹಳ್ಳಿ ನಿಂಗೇಗೌಡ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಮಂಗಳಮ್ಮ, ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣೇಗೌಡ, ರಾಜ್ಯ ಉಪಾಧ್ಯಕ್ಷ ಶ್ರೀಧರ್, ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಂಜಿತ್ ಗೌಡ, ಪದಾಧಿಕಾರಿಗಳಾದ ವೆಂಕಟೇಶ್, ತಿಮ್ಮರಾಜು, ಮರಿಅಂಕೇಗೌಡ, ಚಿಕ್ಕೇನಹಳ್ಳಿ ರಾಮಚಂದ್ರು, ವಿರುಪಸಂದ್ರ ಮಂಗಳಮ್ಮ, ಸತೀಶ್, ಯೇಸು, ಟೆಂಪೊ ರಾಜೇಶ್, ಮಂಗಳವಾರಪೇಟೆ ನಾಗೇಶ್, ತೌಟನಹಳ್ಳಿ ರಾಮಚಂದ್ರು, ಕೃಷ್ಣದೇವ್, ಎಚ್.ಎಂ.ಚಿಕ್ಕಣ್ಣ, ಪ್ರಕಾಶ್, ಶ್ಯಾಮ್, ಮೂರ್ತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.