ADVERTISEMENT

ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ ಖರೀದಿಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2019, 13:24 IST
Last Updated 6 ಡಿಸೆಂಬರ್ 2019, 13:24 IST
ಶುಕ್ರವಾರ ಜಿಲ್ಲಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಮಾತನಾಡಿದರು
ಶುಕ್ರವಾರ ಜಿಲ್ಲಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಮಾತನಾಡಿದರು   

ರಾಮನಗರ: ರೈತರು ಬೆಳೆದಿರುವ ರಾಗಿ ಮತ್ತು ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ತೆರೆದು ಖರೀದಿ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಸೂಚಿಸಿದರು.

ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಅವರು ಮಾತನಾಡಿದರು. ರೈತರಿಗೆ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಅವರು ಬೆಳೆದ ಬೆಳೆಗಳನ್ನು ನೇರವಾಗಿ ಕನಿಷ್ಠ ಬೆಂಬಲ ಯೋಜನೆಯಡಿ ಖರೀದಿಸಲಾಗುವುದು. ಕೇಂದ್ರ ಸರ್ಕಾರ ಒಂದು ಕ್ವಿಂಟಲ್ ಸಾಮಾನ್ಯ ಭತ್ತಕ್ಕೆ ₹1815, ಗ್ರೇಡ್ ಎ ಭತ್ತಕ್ಕೆ ₹1835 ಹಾಗೂ ರಾಗಿಗೆ ₹3150 ನಿಗದಿ ಮಾಡಿದೆ. ಖರೀದಿ ಕೇಂದ್ರಗಳನ್ನು ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ತೆರೆಯಲಾಗುವುದು. ತಾಲ್ಲೂಕಿನ ತಹಶೀಲ್ದಾರ್ ನೋಡಲ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವ ಮೊದಲು ರೈತರಿಂದ ಅವಶ್ಯಕವಿರುವ ಬ್ಯಾಂಕ್ ಖಾತೆಯ ವಿವರ, ಆರ್.ಟಿ.ಸಿ, ಬೆಳೆ ದೃಢೀಕರಣ ಪತ್ರ, ಮೊಬೈಲ್ ಸಂಖ್ಯೆ ಹಾಗೂ ಇನ್ನಿತರೆ ಅವಶ್ಯಕ ದಾಖಲೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಸಂಗ್ರಹಿಸಿಕೊಳ್ಳಿ. ರೈತರು ತಮ್ಮ ಸರಿಯಾದ ಮೊಬೈಲ್ ಸಂಖ್ಯೆಯನ್ನು ನೀಡಿ. ಇದರಿಂದ ಅಧಿಕಾರಿಗಳು ತಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು. ರೈತರಿಂದ ಹಣವನ್ನು ಸಹ ಆರ್.ಟಿ.ಜಿ.ಸ್. ಮೂಲಕ ಪಾವತಿಸಲಾಗುವುದು ಎಂದರು.

ADVERTISEMENT

ಆಹಾರ ಇಲಾಖೆ ಉಪನಿರ್ದೇಶಕ ಕೃಷ್ಣಕುಮಾರ್ ಮಾತನಾಡಿ ಕಳೆದ ಸಾಲಿನಲ್ಲಿ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ 5192 ಕ್ವಿಂಟಲ್ ಭತ್ತ ಹಾಗೂ 1,20 ಲಕ್ಷ ಕ್ವಿಂಟಲ್ ರಾಗಿಯನ್ನು ಖರೀದಿಸಲಾಗಿದೆ. ಈ ಬಾರಿ ರೈತರನ್ನು ಖರೀದಿ ಕೇಂದ್ರದ ಮುಂದೆ ಕಾಯಿಸದೆ ಖರೀದಿಸಲು ಕೂಪನ್ ವ್ಯವಸ್ಥೆ ಮಾಡಲು ಚಿಂತಿಸಲಾಗುತ್ತಿದೆ. ರೈತರಿಂದ ಭತ್ತ ಹಾಗೂ ರಾಗಿಯ ಸ್ಯಾಂಪಲ್ ಪಡೆದು ಅದರ ಗುಣಮಟ್ಟವನ್ನು ಪರೀಕ್ಷಿಸಿ ನಂತರ ಖರೀದಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.