ADVERTISEMENT

ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌: ಪ್ರತಿಭಟನೆ

ಕೆಂಪೇಗೌಡನದೊಡ್ಡಿ ವಿದ್ಯಾರ್ಥಿನಿಲಯದ ರಸ್ತೆ ಬಂದ್ ಮಾಡಿದ ಗ್ರಾಮಸ್ಥರು

​ಪ್ರಜಾವಾಣಿ ವಾರ್ತೆ
Published 9 ಮೇ 2020, 9:35 IST
Last Updated 9 ಮೇ 2020, 9:35 IST
ಕೆಂಪೇಗೌಡನದೊಡ್ಡಿ ವಿದ್ಯಾರ್ಥಿನಿಲಯದ ರಸ್ತೆ ಬಂದ್ ಮಾಡಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು
ಕೆಂಪೇಗೌಡನದೊಡ್ಡಿ ವಿದ್ಯಾರ್ಥಿನಿಲಯದ ರಸ್ತೆ ಬಂದ್ ಮಾಡಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು   

ರಾಮನಗರ: ಹೊರಜಿಲ್ಲೆ ಕಾರ್ಮಿಕರನ್ನು ನಗರದ ಹೊರವಲಯದಲ್ಲಿರುವ ಕೆಂಪೇಗೌಡನದೊಡ್ಡಿ ಗ್ರಾಮದ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದಲ್ಲಿ ಕ್ವಾರಂಟೈನ್ ಮಾಡಲಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಗ್ರಾಮಸ್ಥರು ಹಾಸ್ಟೆಲ್ ಗೆ ಹೋಗುವ ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಗುರುವಾರ ತಡರಾತ್ರಿ ಕೆಲವು ಸರ್ಕಾರಿ ಸಿಬ್ಬಂದಿ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸ್ವಚ್ಛಗೊಳಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ನೂರಾರು ಗ್ರಾಮಸ್ಥರು ಹಾಸ್ಟೆಲ್ ಗೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು.

ಬೆಳಿಗ್ಗೆಯಿಂದಲೇ ಗ್ರಾಮದ ಮಹಿಳೆಯರು ಹಾಸ್ಟೆಲ್ ಗೆ ಹೋಗುವ ದಾರಿಗಳಲ್ಲಿ ಮೊಕ್ಕಂ ಹೂಡಿ, ಯಾವುದೇ ಕಾರಣಕ್ಕೂ ಗ್ರಾಮದಲ್ಲಿ ಕ್ವಾರಂಟೈನ್ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಬಿಸಿಲನ್ನೂ ಲೆಕ್ಕಿಸದೆ ರಸ್ತೆಯ
ಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪ್ರತಿಭಟನಾನಿರತರನ್ನು ಮನವೊಲಿಸಲು ಪ್ರಯತ್ನಿಸಿದರೂ ಅವರ ಮಾತಿಗೂ ಮನ್ನಣೆ ನೀಡದ ಮಹಿಳೆಯರು ಪ್ರತಿಭಟನೆ ಮುಂದು
ವರಿಸಿದರು.

ADVERTISEMENT

ಗ್ರಾಮದ ಮುಖಂಡ ಕೆ.ಬಿ.ರಾಜಣ್ಣ ಸುದ್ದಿಗಾರರೊಂದಿಗೆ ಮಾತನಾಡಿ ‘ತಾಲ್ಲೂಕಿನಲ್ಲಿ ಸಾಕಷ್ಟು ಹಾಸ್ಟೆಲ್ ಗಳು ಇದ್ದರೂ ಸಹ ಅಧಿಕಾರಿಗಳು ಗ್ರಾಮೀಣ ಪ್ರದೇಶಲ್ಲಿ ಕ್ವಾರಂಟೈನ್ ಮಾಡಲು ಮುಂದಾಗಿರುವುದು ಸರಿಯಲ್ಲ. ಬಡವರು ಕೂಲಿ ಕಾರ್ಮಿಕರು ಹೆಚ್ಚಾಗಿ ವಾಸಿಸುವ ಈ ಗ್ರಾಮದಲ್ಲಿ ಯಾವುದೇ ಆತಂಕವಿಲ್ಲದೇ ನೆಮ್ಮದಿಯಾಗಿ ಜೀವನ ಮಾಡುತ್ತಿದ್ದೇವೆ. ಈಗ ಹೊರ ಜಿಲ್ಲೆಯಿಂದ ಕಾರ್ಮಿಕರನ್ನು ಕರೆತಂದು ಕ್ವಾರಂಟೈನ್ ಮಾಡುವ ಮೂಲಕ ನಮ್ಮ ಗ್ರಾಮಕ್ಕೆ ಕರೋನಾ ಹಬ್ಬಿಸುವುದು ಬೇಡ, ಜಿಲ್ಲಾಡಳಿತ ತನ್ನ ನಿರ್ಧಾರ ಬದಲಾಯಿಸಬೇಕು’ ಎಂದು ಆಗ್ರಹಿಸಿದರು.

ನಂತರ ಕೆಂಪೇಗೌಡನದೊಡ್ಡಿ ಮುಖಂಡರು ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಹಾಸ್ಟೆಲ್ ನಲ್ಲಿ ಯಾವುದೇ ಕಾರಣಕ್ಕೂ ಕ್ವಾರಂಟೈನ್ ಮಾಡಬಾರದೆಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.