ADVERTISEMENT

ಜನನ-ಮರಣ ನೋಂದಣಿ: ಶೇ 100ರಷ್ಟು ಗುರಿ ಸಾಧಿಸಿ

ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 5:49 IST
Last Updated 13 ಜುಲೈ 2024, 5:49 IST
ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಸಿ ಯಶವಂತ್ ವಿ. ಗುರುಕರ್ ಅವರು, ಜಿಲ್ಲಾಮಟ್ಟದ ಜನನ ಮತ್ತು ಮರಣ ನೋಂದಣಿ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದಾರೆ
ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಸಿ ಯಶವಂತ್ ವಿ. ಗುರುಕರ್ ಅವರು, ಜಿಲ್ಲಾಮಟ್ಟದ ಜನನ ಮತ್ತು ಮರಣ ನೋಂದಣಿ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದಾರೆ   

ರಾಮನಗರ: ‘ಕರ್ನಾಟಕ ಜನನ ಮತ್ತು ಮರಣ ನೋಂದಣಿ ನಿಯಮಗಳು– 2023 ಅಧಿಸೂಚನೆಯಂತೆ, ಜಿಲ್ಲೆಯಲ್ಲಿ ನೋಂದಣಿ ಪ್ರಕ್ರಿಯೆಯನ್ನು ಶೇಕಡ ನೂರರಷ್ಟು ಸಾಧಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಜನನ ಹಾಗೂ ಮರಣವನ್ನು ಕಡ್ಡಾಯವಾಗಿ 21 ದಿನದೊಳಗೆ ನೋಂದಾಯಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಜನನ– ಮರಣ ನೋಂದಣಿ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಜನನ ಹಾಗೂ ಮರಣವಾದ 21 ದಿನದೊಳಗೆ ಕಡ್ಡಾಯವಾಗಿ ನೋಂದಾಯಿಸಿ ಪ್ರಮಾಣಪತ್ರವನ್ನು ಉಚಿತವಾಗಿ ನೀಡಬೇಕು’ ಎಂದರು.

‘ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ ಹಾಗೂ ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನನ ಮರಣ ನೋಂದಣಾಧಿಕಾರಿಗಳು ಅಥವಾ ಉಪ ನೋಂದಣಾಧಿಕಾರಿಗಳು ಸಂಬಂಧಿಸಿದ ಪ್ರದೇಶಗಳ ವರದಿಗಳನ್ನು ಸಕಾಲದಲ್ಲಿ ಸಲ್ಲಿಸಬೇಕು. ಅವುಗಳನ್ನು ಸಂರಕ್ಷಿಸಿ ಹಾಗೂ ವ್ಯವಸ್ಥಿತವಾಗಿ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ನಾಗರಿಕ ನೋಂದಣಿ ಪದ್ಧತಿಯಡಿ, ಪ್ರತಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಮರಣಗಳಿಗೆ ಕಾರಣ ಕುರಿತ ವೈದ್ಯಕೀಯ ಪ್ರಮಾಣಪತ್ರದ (ನಮೂನೆ 4/4ಎ) ವರದಿಯನ್ನು ಜನನ– ಮರಣಗಳ ಮುಖ್ಯ ನೋಂದಣಾಧಿಕಾರಿಗೆ ಸಲ್ಲಿಸಬೇಕು’ ಎಂದು ಹೇಳಿದರು.

‘ಆಸ್ಪತ್ರೆಯಲ್ಲಿ ಮಗು ಜನಿಸಿದ ತಕ್ಷಣ, ಅದನ್ನು ನೋಂದಾಯಿಸಿ ಉಚಿತ ಜನನ ಪ್ರಮಾಣಪತ್ರದೊಂದಿಗೆ ತಾಯಿ-ಮಗುವನ್ನು ಮನೆಗೆ ಕಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಅದಕ್ಕಾಗಿ ಉಪ ನೋಂದಣಿ ಘಟಕಗಳನ್ನು ಆರಂಭಿಸಲಾಗಿದೆ. ಅನಗತ್ಯವಾಗಿ ನೋಂದಣಿ ವಿಳಂಬ ತಪ್ಪಿಸಲು, ಜನನ ಹಾಗೂ ಮರಣ ಘಟಿಸಿದ ಸ್ಥಳದಲ್ಲಿಯೇ ನೋಂದಣಿ ಮಾಡಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

‘ಇ–ಜನ್ಮ ತಂತ್ರಾಂಶದಲ್ಲಿ ನೋಂದಣಿಯಾಗದೆ ಬಾಕಿ ಉಳಿದ ಘಟನೆಗಳನ್ನು ನೋಂದಾಯಿಸಲು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು, ಕಚೇಋಇಯ ಸಹಾಯಕ ನಿರ್ದೇಶಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಬೇಕು. ಬಾಕಿ ಜನನ– ಮರಣ ಘಟನೆಗಳನ್ನು ನಮೂನೆಗಳಲ್ಲಿ ಲಭ್ಯವಿರುವ ವರದಿಯನ್ನು ದೃಢೀಕರಿಸಿ ಸಲ್ಲಿಸಬೇಕು. ಜಿಲ್ಲೆಯಲ್ಲಿ ಬಾಕಿ ಇರುವ 269 ಜನನ ಹಾಗೂ 80 ಮರಣ ಘಟನೆಗಳ ವರದಿಯನ್ನು ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.