ADVERTISEMENT

ಕಲ್ಲಹಳ್ಳಿ ಶ್ರೀನಿವಾಸ ಜಾತ್ರಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2020, 14:17 IST
Last Updated 9 ಫೆಬ್ರುವರಿ 2020, 14:17 IST
ಜಾತ್ರಾ ಮಹೋತ್ಸವದಲ್ಲಿ ಭಕ್ತರು ದೇವಾಲಯದ ಮುಂದೆ ಪೂಜೆ ಸಲ್ಲಿಸಿದರು
ಜಾತ್ರಾ ಮಹೋತ್ಸವದಲ್ಲಿ ಭಕ್ತರು ದೇವಾಲಯದ ಮುಂದೆ ಪೂಜೆ ಸಲ್ಲಿಸಿದರು   

ಕನಕಪುರ: ತಾಲ್ಲೂಕಿನ ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಕಲ್ಲಹಳ್ಳಿ ವೆಂಕಟರಮಣಸ್ವಾಮಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.

ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಬರುವ ಭಕ್ತರಿಗೆ ದೇಗುಲ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಕನಕಪುರದಿಂದ ಕಲ್ಲಹಳ್ಳಿಗೆ ಹೋಗುವ ಮಾರ್ಗದ ಉದ್ದಕ್ಕೂ ರಸ್ತೆಯ ಅಕ್ಕಪಕ್ಕದ ಜಮೀನುಗಳಲ್ಲಿ ದಾಸೋಹದ ಅರೆವಂಟಿಕೆ ತೆರೆದು ಬೆಳಿಗ್ಗೆಯಿಂದ ರಾತ್ರಿವರೆಗೂ ಊಟ ಹಾಕಲಾಯಿತು. ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ ಮಾಡಲಾಯಿತು.

ಬೆಳಿಗ್ಗೆ 5ರಿಂದ ರಾತ್ರಿ 10ರವರೆಗೂ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಮಧ್ಯಾಹ್ನ 1ಕ್ಕೆ ಬ್ರಹ್ಮರಥೋತ್ಸವಕ್ಕೆ ತಹಶೀಲ್ದಾರ್‌ ವರ್ಷ ಒಡೆಯರ್‌ ಚಾಲನೆ ನೀಡಿದರು.ಸಂಜೆ 5ಕ್ಕೆ ರಥೋತ್ಸವ ಮುಕ್ತಾಯವಾಯಿತು.

ADVERTISEMENT

ಪ್ರತಿವರ್ಷ ಕಂದಾಯ ಇಲಾಖೆ, ಮುಜರಾಯಿ ಇಲಾಖೆಯಿಂದ ವಿಐಪಿಗಳಿಗೆ ಪಾಸ್‌ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ಬಾರಿ ಅದಕ್ಕೆ ಅವಕಾಶ ನೀಡದೆ ಎಲ್ಲರೂ ಸಮಾನರಾಗಿ ಸರತಿ ಸಾಲಿನಲ್ಲೇ ದೇವರ ದರ್ಶನ ಮಾಡುವಂತೆ ಅವಕಾಶ ಮಾಡಲಾಗಿತ್ತು. ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.

ಕಲ್ಲಹಳ್ಳಿ ಜಾತ್ರೆಯಲ್ಲಿ ವಿಶೇಷವಾಗಿ ಮದ್ದುಗುಂಡಗಳ ಪ್ರದರ್ಶನ ಪ್ರಮುಖ ಆಕರ್ಷಣೆ. ಭಾನುವಾರ ರಾತ್ರಿ ಮದ್ದುಗುಂಡಗಳ ಪ್ರದರ್ಶನ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.