ADVERTISEMENT

ರಾಮನಗರ | ನಿಖರ ದತ್ತಾಂಶ ನೀಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2026, 4:41 IST
Last Updated 18 ಜನವರಿ 2026, 4:41 IST
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ಮತ್ತು ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ವರದಿ ಸಿದ್ದಪಡಿಸುವ ಕುರಿತು ಹಮ್ಮಿಕೊಂಡಿದ್ದ ಕಾರ್ಯಗಾರದಲ್ಲಿ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ನಿವೃತ್ತ ನಿರ್ದೇಶಕಿ ಡಾ. ವಸುಂದರ ದೇವಿ ಮಾತನಾಡಿದರು
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ಮತ್ತು ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ವರದಿ ಸಿದ್ದಪಡಿಸುವ ಕುರಿತು ಹಮ್ಮಿಕೊಂಡಿದ್ದ ಕಾರ್ಯಗಾರದಲ್ಲಿ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ನಿವೃತ್ತ ನಿರ್ದೇಶಕಿ ಡಾ. ವಸುಂದರ ದೇವಿ ಮಾತನಾಡಿದರು   

ರಾಮನಗರ: ‘ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-2031ರ ವರದಿಯನ್ನು ಜೂನ್‌ ಅಂತ್ಯದೊಳಗೆ ಸಿದ್ಧಪಡಿಸಬೇಕಿದೆ. ಅದಕ್ಕೆ‌ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನಿಖರ ದತ್ತಾಂಶ ನೀಡಬೇಕು’ ಎಂದು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ನಿವೃತ್ತ ನಿರ್ದೇಶಕಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಿರಿಯ ಸಮಾಲೋಚಕಿ ಡಾ. ವಸುಂದರ ದೇವಿ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಮತ್ತು ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ– 2031ರ ವರದಿ ಸಿದ್ದಪಡಿಸುವ ಸಂಬಂಧ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಅಧಿಕಾರಿಗಳು ಹಳೆ ದತ್ತಾಂಶಗಳನ್ನು ನೀಡದೆ ಇತ್ತೀಚಿನ ದತ್ತಾಂಶಗಳನ್ನು ಮಾತ್ರ ನೀಡಬೇಕು. ಮಾನವ ಅಭಿವೃದ್ಧಿಯ ಸೂಚ್ಯಂಕಕ್ಕೆ 1990ರ ನಂತರ ಹೊಸ ವ್ಯಾಖ್ಯಾನ ನೀಡಲಾಗಿದೆ. ಒಂದು ದೇಶದ ಅಭಿವೃದ್ಧಿಯನ್ನು ಮಾನವನ ಅಭಿವೃದ್ಧಿ ಅಳತೆಯ ಮೂಲಕ ಹೇಳಬಹುದಾಗಿದೆ. ಜನರಿಗೆ ಆಯ್ಕೆಯ ಸ್ವಾತಂತ್ರ್ಯ ನೀಡಿ ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನು ದಾಖಲಿಸಬಹುದಾಗಿದೆ’ ಎಂದರು.

ADVERTISEMENT

‘ಬದುಕು ಹಾಗೂ ಬದುಕಲು ಬಿಡುವುದು ಮಾನವ ಅಭಿವೃದ್ಧಿಯ ಮೂಲ ಉದ್ದೇಶ. ಅಭಿವೃದ್ಧಿಯಲ್ಲಿ ಶಿಕ್ಷಣ, ಕೌಶಲ ಹಾಗೂ ಜೀವನಮಟ್ಟವನ್ನು ಮುಖ್ಯ ಸೂಚಕಗಳಾಗಿ ಗುರುತಿಸಲಾಗುತ್ತದೆ. 2015ರಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ ಮಾನವ ಅಭಿವೃದ್ಧಿ ಸೂಚ್ಯಂಕದ ಬಗ್ಗೆ ಜಿಲ್ಲಾಮಟ್ಟದಲ್ಲಿ ವರದಿ ತಯಾರಿಸಲು ಅವಕಾಶ ಮಾಡಿಕೊಟ್ಟಿತು’ ಎಂದು ತಿಳಿಸಿದರು.

‘ಶಿಕ್ಷಣ, ಆರೋಗ್ಯ ಪೋಷಣಾ ಸ್ಥಿತಿ, ಜೀವನೋಪಾಯ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ ಹಾಗೂ ಪರಿಸರದ ಸುಸ್ಥಿರತೆ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು ಈ ವರದಿಗಳ ಪ್ರಮುಖ ಗುರಿಯಾಗಿದೆ’ ಎಂದು ಹೇಳಿದರು.

‘ಅಧಿಕಾರಿಗಳು ದತ್ತಾಂಶ ಸಂಗ್ರಹಣೆ, ವಿಶ್ಲೇಷಣೆ, ಇಲಾಖಾವಾರು ಸಹಕಾರ ಮತ್ತು ಕಾಲಮಿತಿಯೊಳಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯ ಸಮಗ್ರ ಹಾಗೂ ಸಮತೋಲನೆಯುತ ಅಭಿವೃದ್ಧಿಗಾಗಿ ಇಲಾಖೆಗಳ ನಡುವೆ ಪರಸ್ಪರ ಸಮನ್ವಯ ಅಗತ್ಯ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ, ಎಸ್‌ಐಆರ್‌ಡಿ ಸಮಾಲೋಚಕರಾದ ಗಣೇಶ್ ಪ್ರಸಾದ್, ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರೇಮಕುಮಾರ್, ಬೆಂಗಳೂರು ವಿಶ್ವವಿದ್ಯಾಲಯದ ಡಾ. ನಾಗೇಶ್ ಮಾತನಾಡಿದರು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಮಾನವ ಅಭಿವೃದ್ಧಿ ಸೂಚ್ಯಂಕ: 130ನೇ ಸ್ಥಾನದಲ್ಲಿ ಭಾರತ! ‘ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ವಿಶ್ವದ 184 ದೇಶಗಳ ಪೈಕಿ ಭಾರತ 130ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 2015ರಿಂದ 2025ರ ನಡುವಣ ಅವಧಿಯಲ್ಲಿ ಕಂಡುಬಂದ ಮಾನವ ಸೂಚ್ಯಂಕದ ಅಭಿವೃದ್ಧಿ ಬಗ್ಗೆಯೂ ಈ ವರದಿಯಲ್ಲಿ ದಾಖಲಿಸಲಾಗುವುದು. ರಾಜ್ಯದ ಪ್ರತಿ ಜಿಲ್ಲೆಗೆ ತನ್ನದೇ ಆದ ವಿಶೇಷತೆ ಇದೆ. ಆ ದಿಸೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಿಂದಲೂ ಅಭಿವೃದ್ಧಿ ಸೂಚ್ಯಂಕಗಳನ್ನು ಪರಿಗಣಿಸಲಾಗುವುದು’ ಎಂದು ಡಾ. ವಸುಂದರ ದೇವಿ ಹೇಳಿದರು. ‘ವರದಿಯನ್ನು ಪರಿಣಾಮಕಾರಿಯಾಗಿ ಸಿದ್ದಪಡಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಈಗಾಗಲೇ 9 ವಲಯಗಳಲ್ಲಿ ಸಮಿತಿ ರಚಿಸಲಾಗಿದೆ. ಮಾಹಿತಿ ಸರಿಯಾಗಿ ನೀಡದಿದ್ದರೆ ಫಲಿತಾಂಶ ವ್ಯತಿರಿಕ್ತಗೊಂಡು ಪ್ರಾದೇಶಿಕ ಅಸಮಾನತೆಗೆ ಕಾರಣವಾಗುತ್ತದೆ. ಅದರಿಂದಾಗಿ ಪರಿಶಿಷ್ಟ ಜಾತಿ ಪಂಗಡ ಅತ್ಯಂತ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.