
ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಜನ್ಮದಿನದ ಪ್ರಯುಕ್ತ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಅವರು, ರಾಮನಗರದ ಹಳೆ ಬಸ್ ನಿಲ್ದಾಣ ವೃತ್ತದಲ್ಲಿರುವ ಕೆಂಗಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ರಾಮನಗರ: ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸೌಧದ ನಿರ್ಮಾತೃವಾದ ಜಿಲ್ಲೆಯ ಹೆಮ್ಮೆಯ ರಾಜಕಾರಣಿ ಕೆಂಗಲ್ ಹನುಮಂತಯ್ಯ ಅವರ ಜನ್ಮದಿನವನ್ನು ನಗರಸಭೆ, ಕೆಂಗಲ್ ಹನುಮಂತಯ್ಯ ಸಾಮಾಜಿಕ ಮತ್ತು ಸಾಂಸ್ಕತಿಕ ಟ್ರಸ್ಟ್ ಹಾಗೂ ವಿವಿಧ ಸಂಘ–ಸಂಸ್ಥೆಗಳ ವತಿಯಿಂದ ಶನಿವಾರ ಆಚರಿಸಲಾಯಿತು.
ನಗರದ ಹಳೆ ಬಸ್ ನಿಲ್ದಾಣದ ಬಳಿ ಇರುವ ಹನುಮಂತಯ್ಯ ಅವರ ಪ್ರತಿಮೆಗೆ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ, ಟ್ರಸ್ಟ್ ಕಾರ್ಯದರ್ಶಿ ಚೂಡಲಿಂಗೇಶ್ವರಯ್ಯ ಸೇರಿದಂತೆ ಹಲವು ಗಣ್ಯರು ಮಾಲಾರ್ಪಣೆ ಮಾಡಿದರು. ಜಿಲ್ಲೆಯ ರಾಜಕಾರಣಿಯ ಕೊಡುಗೆಯನ್ನು ಸ್ಮರಿಸಿದರು. ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ, ‘ಸ್ವಾಭಿಮಾನದ ರಾಜಕಾರಣಕ್ಕೆ ಹೆಸರಾಗಿದ್ದ ಕೆಂಗಲ್ ಹನುಮಂತಯ್ಯ ಅವರು ನಾಡಿನ ಆಡಳಿತ ಸೌಧವಾದ ವಿಧಾನಸೌಧ ನಿರ್ಮಾಣ ಸೇರಿದಂತೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ರಾಮನಗರವನ್ನು ಪ್ರತಿನಿಧಿಸುತ್ತಿದ್ದ ಅವರು ರಾಜ್ಯದ ಮೊದಲ ಚುನಾಯಿತಿ ಮುಖ್ಯಮಂತ್ರಿಯಾಗಿ ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು’ ಎಂದರು.
‘ಸಂಸತ್ಗೆ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣ ಪ್ರವೇಶಿಸಿದ ಹನುಮಂತಯ್ಯ ಅವರು ಕೇಂದ್ರ ರೈಲ್ವೆ ಸಚಿವರಾಗಿ ಹಲವು ಕೆಲಸಗಳನ್ನು ಮಾಡಿದರು. ನಮ್ಮ ಜಿಲ್ಲೆಯು ಕಂಡಿರುವ ಇಂತಹ ಮಹಾನ್ ನಾಯಕನ ಕೊಡುಗೆಯನ್ನು ನಾವೆಲ್ಲರೂ ಸ್ಮರಿಸಬೇಕಿದೆ. ಮಾದರಿ ರಾಜಕಾರಣಿಯ ಆದರ್ಶವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಿದೆ’ ಎಂದರು.
ಟ್ರಸ್ಟ್ ಕಾರ್ಯದರ್ಶಿ ಚೂಡಲಿಂಗೇಶ್ವರಯ್ಯ ಮಾತನಾಡಿ, ‘ನಗರದ ಹಳೆ ಬಸ್ ನಿಲ್ದಾಣದಲ್ಲಿರುವ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಯು ನಮ್ಮ ನೆಲದ ಹೆಮ್ಮೆಯ ರಾಜಕಾರಣಿಯನ್ನು ಸದಾ ಸ್ಮರಿಸುವಂತೆ ಮಾಡಿದೆ. ಕೆಂಗಲ್ ಅವರ ನೆನಪಿನಾರ್ಥವಾಗಿ ಟ್ರಸ್ಟ್ ವತಿಯಿಂದ ಪ್ರ ವರ್ಷ ಜನ್ಮದಿನ ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.
ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ, ಟ್ರಸ್ಟ್ ಉಪಾಧ್ಯಕ್ಷ ಚನ್ನಮಾನಹಳ್ಳಿ ಅಪ್ಪಾಜಣ್ಣ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಹೆಚ್. ಮಂಜು, ಭಾರತಿ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ. ಚಂದ್ರಯ್ಯ, ಟಿಎಪಿಸಿಎಂಎಸ್ ಅಧ್ಯಕ್ಷ ದೊಡ್ಡಿ ಸುರೇಶ್, ಬಿಡದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮೇಲಿಂಗು, ಜಿ.ಪಂ. ಮಾಜಿ ಸದಸ್ಯ ಕೆ. ರಮೇಶ್, ನಗರಸಭೆ ಸದಸ್ಯರಾದ ಮಂಜುನಾಥ್, ಪಾರ್ವತಮ್ಮ, ವಿಜಯಕುಮಾರಿ, ಮಂಜುಳಾ , ಮಹಾಲಕ್ಷ್ಮಿ, ಪವಿತ್ರ, ಸೋಮಶೇಖರ್, ಮುತ್ತುರಾಜು, ಗ್ಯಾಬ್ರಿಯಲ್, ನಾಗಮ್ಮ, ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಕುಮಾರಸ್ವಾಮಿ ಹಾಗೂ ಇತರರು ಇದ್ದರು.
ಕೆಂಗಲ್ ಹನುಮಂತಯ್ಯ ಪ್ರತಿಮೆ ಸ್ಥಳದಲ್ಲಿ ಪ್ಲೆಕ್ಸ್ ಮತ್ತು ಬ್ಯಾನರ್ ಕಟ್ಟುವುದನ್ನು ನಗರಸಭೆ ನಿಷೇಧಿಸಿದೆ. ನಗರಸಭೆ ಆದೇಶ ಮೀರಿ ಯಾರಾದರೂ ಕಟ್ಟಿದರೆ ದಂಡ ವಿಧಿಸಲಾಗುವುದು– ಕೆ. ಶೇಷಾದ್ರಿ ಶಶಿ ಅಧ್ಯಕ್ಷ ನಗರಸಭೆ ರಾಮನಗರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.