ರಾಮನಗರ: ‘ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿಎಸ್ಪಿ) ಅನುದಾನವನ್ನು ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಬಾರದು. ಸಮುದಾಯಕ್ಕೆ ಮೀಸಲಾಗಿರುವ ಅನುದಾನವನ್ನು ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮಾತ್ರ ಬಳಕೆ ಮಾಡಬೇಕು’ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಆರ್. ಧರ್ಮಸೇನ ಒತ್ತಾಯಿಸಿದರು.
‘ನಮ್ಮ ತಂದೆ ಎನ್. ರಾಚಯ್ಯ ಅವರು ಮೊದಲಿಗೆ ಪರಿಶಿಷ್ಟರ ನಿಗಮಗಳಿಗೆ ಪ್ರತ್ಯೇಕ ಅನುದಾನ ಇಡುವ ವ್ಯವಸ್ಥೆ ಜಾರಿಗೆ ತಂದರು. ನಂತರ ಸಿದ್ದರಾಮಯ್ಯ ಅವರು ಮೊದಲ ಸಲ ಮುಖ್ಯಮಂತ್ರಿಯಾದಾಗ, ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಎಚ್. ಆಂಜನೇಯ ಅವರು ಎಸ್ಸಿಎಸ್ಪಿ–ಟಿಎಸ್ಪಿ ಕಾಯ್ದೆ ಜಾರಿಗೆ ತಂದರು’ ಎಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ರಾಜ್ಯ ಸರ್ಕಾರ ಸದ್ಯದ ಪರಿಸ್ಥಿತಿಯಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಮೊತ್ತ ಭರಿಸಬೇಕಾಗಿರುವುದರಿಂದ ಪರಿಶಿಷ್ಟರ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡುತ್ತಿದೆ. ಅನಿವಾರ್ಯವಾಗಿ ಅಂತಹದ್ದೊಂದು ಸ್ಥಿತಿ ನಿರ್ಮಾಣವಾಗಿದೆ. ಮುಂದೆ ಈ ರೀತಿ ಮಾಡಬೇಡಿ ಎಂದು ನಾನು ಸಹ ಒತ್ತಾಯ ಮಾಡಿದ್ದೇನೆ’ ಎಂದರು.
‘ದಲಿತ ಮುಖ್ಯಮಂತ್ರಿ ಬೇಡಿಕೆ ಹಿಂದಿನಿಂದಲೂ ಇದೆ. ಇದಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಸಹ ಕೇಳಿ ಬಂದಿದೆ. ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ಖರ್ಗೆ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪರಮೇಶ್ವರ್ ಅವರು ತಮಗೂ ಒಂದು ಅವಕಾಶ ಬೇಕು ಎಂದಿದ್ದಾರೆ. ಸಂದರ್ಭ ಬಂದಾಗ ದಲಿತ ಮುಖ್ಯಮಂತ್ರಿ ಬೇಡಿಕೆ ಈಡೇರಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
‘ನಿಗಮ–ಮಂಡಳಿಗಳ ಪದಾಧಿಕಾರಿಗಳ ಸ್ಥಾನಕ್ಕೆ ಪೈಪೈಟಿ ಹೆಚ್ಚಾಗಿದೆ. ಈಗಾಗಲೇ ಸಿದ್ದವಾಗಿದ್ದ ಪಟ್ಟಿಗೆ ಆಕ್ಷೇಪ ವ್ಯಕ್ತವಾಗಿದ್ದರಿಂದ ಮತ್ತೊಮ್ಮೆ ಪಕ್ಷದ ನಾಯಕರು ಪರಿಷ್ಕರಣೆ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ನಾಯಕರ ಶಿಫಾರಸಿನ ಮೇರೆಗೆ ಆಯ್ಕೆ ನಡೆಯಲಿದ್ದು, ಪಕ್ಷಕ್ಕಾಗಿ ದುಡಿದ ಪದಾಧಿಕಾರಿಗಳಿಗೆ ನಿಗಮ–ಮಂಡಗಳಿಗಳಲ್ಲಿ ಅಧಿಕಾರ ಸಿಗಲಿದೆ’ ಎಂದು ತಿಳಿಸಿದರು.
ಅಹವಾಲು ಆಲಿಕೆ: ‘ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷದ ಪರಿಶಿಷ್ಟ ವಿಭಾಗದ ಪದಾಧಿಕಾರಿಗಳ ಅಹವಾಲು ಸಭೆ ನಡೆಸುತ್ತಿದ್ದೇನೆ. ಈಗಾಗಲೇ ಕೆಲ ಜಿಲ್ಲೆಗಳ ಪ್ರವಾಸ ಮುಗಿಸಿದ್ದೇನೆ. ಇದೀಗ ಪಕ್ಷದ ಸದಸ್ಯತ್ವಕ್ಕಾಗಿ ಗೂಗಲ್ ಸದಸ್ಯತ್ವ ನೋಂದಣಿ ಆರಂಭಿಸಿದ್ದೇವೆ’ ಎಂದು ಹೇಳಿದರು.
‘ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗುತ್ತಿವೆ. ಅದಕ್ಕಾಗಿ, ಪಕ್ಷವನ್ನು ಸಂಘಟಿಸಿ ಚುನಾವಣೆಗೆ ಅಣಿಗೊಳಿಸುವ ಕೆಲಸ ನಡೆಯುತ್ತಿದೆ’ ಎಂದು ತಿಳಿಸಿದರು.
‘ಸರ್ಕಾರ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಒಳ ಮೀಸಲಾತಿ ಬೇಡಿಕೆಯನ್ನು ಈಡೇರಿಸಿದೆ. ಇದೀಗ, ಅಲೆಮಾರಿಗಳನ್ನು ಬಲಿಷ್ಠ ಜಾತಿಗಳ ಗುಂಪಿಗೆ ಸೇರಿಸಿರುವುದನ್ನು ವಿರೋಧಿಸಿ, ಅವರಿಗೆ ಪ್ರತ್ಯೇಕ ಮೀಸಲಾತಿಗೆ ಕೂಗು ಎದ್ದಿದೆ. ಇದಕ್ಕೆ ಸರ್ಕಾರ ಸೂಕ್ತವಾಗಿ ಸ್ಪಂದಿಸುವ ಕೆಲಸ ಮಾಡಲಿದೆ’ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಘಟಕದ ಉಪಾಧ್ಯಕ್ಷ ಕಾಳಯ್ಯ, ಜಿಲ್ಲಾಧ್ಯಕ್ಷ ಎನ್. ನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ಸಿ. ಜಯರಾಮು, ಕೆಪಿಸಿಸಿ ಮುಖ್ಯ ವೀಕ್ಷಕ ಕಾಳಯ್ಯ, ಮುಖಂಡರಾದ ರಾಮಲಿಂಗಯ್ಯ, ಗೌತಮ್, ಪದ್ಮಾ, ಗುಡ್ಡೆ ವೆಂಕಟೇಶ್, ವೆಂಕಟೇಶ್, ಗುರುಮೂರ್ತಿ, ಶಿವಶಂಕರ್ ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.