ADVERTISEMENT

ರಾಮನಗರ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 19:26 IST
Last Updated 9 ಜುಲೈ 2025, 19:26 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ಕೊಪ್ಪಳ ಮೂಲದ 13 ವರ್ಷದ ಬಾಲಕಿಯ ಕೊಲೆಯಾಗಿದೆ. ಕೃತ್ಯಕ್ಕೆ ಮುಂಚೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯ ತಂದೆ–ತಾಯಿ ಇಬ್ಬರೂ ಕಟ್ಟಡ ನಿರ್ಮಾಣ ಕೆಲಸ ಮಾಡುವ ವಲಸೆ ಕಾರ್ಮಿಕರಾಗಿದ್ದಾರೆ. ದಂಪತಿ ಒಂದೂವರೆ ವರ್ಷದಿಂದ ನಾಲ್ವರು ಮಕ್ಕಳೊಂದಿಗೆ ಪಟ್ಟಣದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಕ್ಕಳ ಪೈಕಿ ಮೂವರು ಶಾಲೆಗೆ ಹೋಗುತ್ತಿದ್ದರು. ಕೊಲೆಯಾದ ಬಾಲಕಿ ಮೂರನೇ ಪುತ್ರಿಯಾಗಿದ್ದು, ಶಾಲೆಗೆ ಹೋಗದೆ ಮನೆಯಲ್ಲೇ ಇದ್ದಳು.

ADVERTISEMENT

ಎಂದಿನಂತೆ ದಂಪತಿ ಬೆಳಿಗ್ಗೆ ಮೂವರು ಮಕ್ಕಳನ್ನು ಶಾಲೆಗೆ ಕಳಿಸಿ, ಮೂರನೇ ಪುತ್ರಿಯನ್ನು ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಬಾಲಕಿ ಸಹೋದರ ಮಧ್ಯಾಹ್ನ ಶಾಲೆಯಿಂದ ಮನೆಗೆ ಬಂದಾಗ ಬಾಗಿಲು ಮುಚ್ಚಿತ್ತು. ಚಿಲಕ ತೆಗೆದು ಒಳ ಹೋಗಿ ನೋಡಿದಾಗ ತನ್ನ ಅಕ್ಕ ರಕ್ತದ ಮಡುವಿನಲ್ಲಿ ಅರೆ ನಗ್ನಾವಸ್ಥೆಯಲ್ಲಿ ಬಿದ್ದಿರುವುದು ಕಂಡುಬಂತು ಎಂದು ಪೊಲೀಸರು ಹೇಳಿದರು.

ಕೂಡಲೇ ಸಹೋದರ ಅಕ್ಕಪಕ್ಕದ ಮನೆಯವರಿಗೆ‌ ಮಾಹಿತಿ ನೀಡಿದ್ದಾನೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದಾಗ, ಬಾಲಕಿ ಇನ್ನೂ ಜೀವಂತವಾಗಿದ್ದಳು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಳು. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಇನ್‌ಸ್ಪೆಕ್ಟರ್ ಡಿ. ಮೋಹನ್‌ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ, ಡಿವೈಎಸ್ಪಿ ಕೆ.ಎಂ. ಪ್ರವೀಣ್‌ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ರಾತ್ರಿ ಕೇಂದ್ರ ವಲಯದ ಐಜಿಪಿ ಲಾಭೂ ರಾಮ್ ಸಹ ಭೇಟಿ ನೀಡಿ, ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.