ADVERTISEMENT

ರಾಮನಗರ | ಫೆಬ್ರಿನ್‌ ಸೋಂಕು ನಿಯಂತ್ರಣಕ್ಕೆ ಆಗ್ರಹ

ರೇಷ್ಮೆ ಮೊಟ್ಟೆಗಳಿಗೆ ಕೀಟಬಾಧೆ; ಉತ್ಪಾದನೆ ಕುಸಿತದ ಆತಂಕ

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 5:07 IST
Last Updated 26 ಜೂನ್ 2022, 5:07 IST
ಶನಿವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ನೋಂದಾಯಿತ ರೇಷ್ಮೆ ಮೊಟ್ಟೆ ಉತ್ಪಾದಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಜಿ.ಮಹೇಂದ್ರ ಮಾತನಾಡಿದರು
ಶನಿವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ನೋಂದಾಯಿತ ರೇಷ್ಮೆ ಮೊಟ್ಟೆ ಉತ್ಪಾದಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಜಿ.ಮಹೇಂದ್ರ ಮಾತನಾಡಿದರು   

ರಾಮನಗರ: ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ಹರಡುತ್ತಿರುವ ಗಂಟು ರೋಗ ನಿಯಂತ್ರಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಜುಲೈ ಮೊದಲ ವಾರದಿಂದ ರೇಷ್ಮೆ ಮೊಟ್ಟೆ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ರಾಜ್ಯ ನೋಂದಾಯಿತ ರೇಷ್ಮೆ ಮೊಟ್ಟೆ ಉತ್ಪಾದಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಜಿ.ಮಹೇಂದ್ರ ಹೇಳಿದರು.

‘ರೇಷ್ಮೆ ಮೊಟ್ಟೆಗಳಿಗೆ ಮಾರಕವಾದ ಫೆಬ್ರಿನ್ ಸೋಂಕು ಹರಡುತ್ತಿದೆ. ಈ ಬಗ್ಗೆ ನಮ್ಮ ಸಂಘ ಹಾಗೂ ಸಿಲ್ಕ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಹಲವಾರು ಬಾರಿ ಪತ್ರ ಬರೆದು ಗಮನ ಸೆಳೆಯಲಾಗಿದೆ. ಆದರೆ ಸ್ಥಳೀಯ ಅಧಿಕಾರಿಗಳು ಕೊಟ್ಟಿರುವ ಸುಳ್ಳು ಮಾಹಿತಿಯನ್ನು ಆಧರಿಸಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಇನ್ನು 8-9 ತಿಂಗಳಲ್ಲಿ ರೇಷ್ಮೆ ಕೃಷಿ ಉದ್ಯಮ ಸಂಪೂರ್ಣ ಕುಸಿಯಲಿದೆ’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿದೂರಿದರು.

‘ಕಳೆದ ವರ್ಷ ಆಗಸ್ಟ್ ನಲ್ಲಿ ರೇಷ್ಮೆ ಉತ್ಪಾದನಾ ಕ್ಷೇತ್ರಗಳಲ್ಲಿ ಈ ಸೋಂಕು ಪತ್ತೆಯಾಗಿತ್ತು. ನವೆಂಬರ್, ಡಿಸೆಂಬರ್‌ನಲ್ಲಿ ಸೋಂಕು ಹೆಚ್ಚು ವ್ಯಾಪಿಸಿತ್ತು. ಬಿತ್ತನೆ ಪ್ರದೇಶಗಳಲ್ಲಿ ಚಿಟ್ಟೆ ಪರೀಕ್ಷೆ, ಸೋಂಕು ನಿವಾರಣಾ ಕ್ರಮಗಳನ್ನು ಅನುಸರಿಸುವುದು, ನೂಲು ಬಿಚ್ಚಾಣಿಕೆಗೆ ಹೋಗುವ ಗೂಡಿಗೆ ಹಬೆ ನೀಡುವ ಕ್ರಮ, ಸೋಂಕು ಹತ್ತಿರುವ ಮೊಟ್ಟೆಗಳ ನಿರ್ಮೂಲನೆ ಕ್ರಮಗಳನ್ನು ಅನುಸರಿಸಬೇಕಾಗಿತ್ತು. ವಿಜ್ಞಾನಿಗಳು ಮತ್ತು ತಜ್ಞರ ನೇತೃತ್ವದಲ್ಲಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಾಗಿತ್ತು. ಆದರೆ ಅಧಿಕಾರಿಗಳು ಇದ್ಯಾವುದರ ಬಗ್ಗೆ ಗಂಭೀರವಾಗಿ ಚಿಂತಿಸಲೇ ಇಲ್ಲ’ ಎಂದು ಅವರುಆರೋಪಿಸಿದರು.

ADVERTISEMENT

‘ಈ ಸೋಂಕು ಈಗಾಗಲೇ ಚೀನಾ, ಇಟಲಿ, ಫ್ರಾನ್ಸ್ ಮೊದಲಾದ ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹರಡಿ ಆ ರಾಷ್ಟ್ರಗಳಲ್ಲಿ ರೇಷ್ಮೆ ಉದ್ಯಮ ನಾಶವಾಗಿದೆ. ಚೀನಾದಿಂದ ಭಾರತಕ್ಕೆ ರೇಷ್ಮೆ ಆಮದಾಗುತ್ತಿಲ್ಲ. ಇದೇ ಕಾರಣಕ್ಕೆ ಸ್ಥಳೀಯವಾಗಿ ರೇಷ್ಮೆ ಗೂಡು ಪ್ರತಿ ಕೆ.ಜಿ.ಗೆ ₹800ರವರೆಗೆ ಬೆಲೆ ದೊರೆಯುತ್ತಿದೆ. ಆದರೆ ಇದೀಗ ಫೆಬ್ರಿನ್ ಸೋಂಕು ಹರಡುತ್ತಿದ್ದು, ನಿಯಂತ್ರಿಸದಿದ್ದರೆ ಇನ್ನು ಇಡೀ ಉದ್ಯಮ ನಾಶವಾಗಲಿದೆ’ ಎಂದು ಅವರು ಎಚ್ಚರಿಸಿದರು.

ನಾಗರಾಜು, ಸಯ್ಯದ್‌ ಇಮ್ರಾನ್, ಶಿವಕುಮಾರ್, ಕೃಷ್ಣಪ್ಪ, ಗಣೇಶ್ ಮುಂತಾದವರುಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.