ಚನ್ನಪಟ್ಟಣ: ‘ಸರ್ದಾರ್ ವಲ್ಲಭಭಾಯ್ ಪಟೇಲರು ಭಾರತದ ಅಖಂಡತೆ ಮತ್ತು ಏಕತೆಗಾಗಿ ಹೋರಾಡಿದ ಮಹನೀಯರಾಗಿದ್ದಾರೆ’ ಎಂದು ಬೆಂಗಳೂರು ಡೇರಿಯ ನಿವೃತ್ತ ಅಧಿಕಾರಿ ಪುಟ್ಟಸ್ವಾಮಿ ಅಭಿಪ್ರಾಯಪಟ್ಟರು.
ಪಟ್ಟಣದ ಮಾರುತಿ ಬಡಾವಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ನ ತಾಲ್ಲೂಕು ಘಟಕದಿಂದ ಶನಿವಾರ ಹಮ್ಮಿಕೊಂಡಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಜಯಂತಿ ಕಾರ್ಯಕ್ರಮದಲ್ಲಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
‘ಪಟೇಲರು ಭಾರತದ ಮೊದಲ ಗೃಹಮಂತ್ರಿ ಮತ್ತು ಉಪ ಪ್ರಧಾನಿಯಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಭಾರತದ ವಿಭಜನೆಯಿಂದ ಉಂಟಾದ ಹಿಂಸಾಚಾರದ ಸಮಯದಲ್ಲಿ ಪಂಜಾಬ್ ಮತ್ತು ದೆಹಲಿಯ ನಿರಾಶ್ರಿತರ ಪರಿಹಾರ ಕಾರ್ಯಗಳನ್ನು ಸಂಘಟಿಸಿ, ಆ ಭಾಗಗಳಲ್ಲಿ ಶಾಂತಿ ಸ್ಥಾಪಿಸಲು ಶ್ರಮಿಸಿದರು’ ಎಂದು
ಹೇಳಿದರು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಮತ್ತೀಕೆರೆ ಬಿ. ಚಲುವರಾಜು ಮಾತನಾಡಿ, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು. ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಬಹುಮುಖ್ಯ ಪಾತ್ರವಹಿಸಿದ್ದು ಅವರ ಹೆಗ್ಗಳಿಕೆ. ಅಧಿಕಾರದ ವಿಕೇಂದ್ರೀಕರಣ, ಧಾರ್ಮಿಕ ಸಮಾನತೆ ಮತ್ತು ಸ್ವಾತಂತ್ರ್ಯ, ಆಸ್ತಿ, ಹಕ್ಕು ಇತ್ಯಾದಿ ವಿಷಯಗಳನ್ನು ಭಾರತದ ಸಂವಿಧಾನದಲ್ಲಿ ಸೇರಿಸಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.
ತಾಲ್ಲೂಕು ಕಸಾಪ ಕೋಶಾಧ್ಯಕ್ಷ ಶ್ರೀನಿವಾಸ ರಾಂಪುರ, ಕಸಾಪ ಮಳೂರು ಹೋಬಳಿ ಅಧ್ಯಕ್ಷ ರಾಜು ವಳಗೆರೆದೊಡ್ಡಿ, ಶ್ಯಾನುಭೋಗನಹಳ್ಳಿ ಎಂಪಿಸಿಎಸ್ ಸಿಇಒ ಮಾದಪ್ಪ, ಗಾಯಕ ಕೆ.ಎಚ್. ಕುಮಾರ್, ಕಿಮ್ಸ್ ಉದ್ಯೋಗಿ ಆರ್.ಕೆ. ವೆಂಕಟೇಶ್, ಮುಖಂಡರಾದ ನಾರಾಯಣ, ಸಾಗರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.