ADVERTISEMENT

ರಾಮನಗರ: ಒಳ ಮೀಸಲಾತಿ ಶೀಘ್ರ ಜಾರಿಗೆ ಆಗ್ರಹ

ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ; ಆ. 15ರವರೆಗೆ ಗಡುವು

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2025, 2:53 IST
Last Updated 3 ಆಗಸ್ಟ್ 2025, 2:53 IST
<div class="paragraphs"><p>ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ರಾಮನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ತಮಟೆ ಮತ್ತು ನಗಾರಿ ಭಾರಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.  </p></div>

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ರಾಮನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ತಮಟೆ ಮತ್ತು ನಗಾರಿ ಭಾರಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.

   

ರಾಮನಗರ: ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಜಿಲ್ಲಾ ಒಳ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ತಮಟೆ ಮತ್ತು ನಗಾರಿಯೊಂದಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗ ನಡೆಸಿದ ಸದಸ್ಯರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅಖಿಲ ಭಾರತ ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ನಾಗೇಶ್, ‘ಒಳ ಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಸೂಚನೆ ನೀಡಿದೆ. ಆದರೆ, ರಾಜ್ಯ ಸರ್ಕಾರ ಅನಗತ್ಯವಾಗಿ ವಿಳಂಬ ಮಾಡಿಕೊಂಡು ಬರುತ್ತಿದೆ. ಆ ಮೂಲಕ ಸಾಮಾಜಿಕ ನ್ಯಾಯ ವಿರೋಧಿ ಧೋರಣೆ ಅನುಸರಿಸುತ್ತಿದೆ’ ಎಂದರು.

ADVERTISEMENT

‘ಪರಿಶಿಷ್ಟ ಜಾತಿಗಳಲ್ಲೇ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಸಲುವಾಗಿ ಒಳ ಮೀಸಲಾತಿ ಜಾರಿಯಾಗಬೇಕು. ಅದಕ್ಕಾಗಿ 35 ವರ್ಷಗಳಿಂದ ಸತತವಾಗಿ ಹೋರಾಟ ನಡೆಯುತ್ತಲೇ ಇದೆ. ಆದರೂ, ಸರ್ಕಾರಗಳ ನಿರ್ಲಕ್ಷ್ಯದಿಂದ ಈ ವಿಷಯ ನನೆಗುದಿಗೆ ಬಿದ್ದಿದೆ. ಈ ಅಸಮಾನತೆ ಸರಿಪಡಿಸಲು ಸುಪ್ರೀಂ ಕೋರ್ಟ್ ಕಳೆದ ವರ್ಷ ಸ್ಪಷ್ಟ ತೀರ್ಪು ನೀಡಿದೆ’ ಎಂದು ಹೇಳಿದರು.

‘ತೀರ್ಪಿನ ಪ್ರಕಾರ, ಎಸ್‌ಸಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡಬೇಕು. ಇದರಿಂದಾಗಿ ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಮೀಸಲಾತಿಯಲ್ಲಿ ಹಿಂದುಳಿದ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯಕ್ಕೆ ಪರಿಹಾರ ಸಿಗಲಿದೆ. ರಾಜ್ಯ ಸರ್ಕಾರ ಆ. 15ರೊಳಗೆ ಒಳ ಮೀಸಲಾತಿ ಅನುಷ್ಠಾನಗೊಳಿಸಬೇಕು’ ಎಂದು ಆಗ್ರಹಿಸಿದರು.

ದಲಿತ ಮುಖಂಡ ಕೆಂಚನಕುಪ್ಪೆ ಬಿ.ಎಂ. ರಮೇಶ್‍ಕುಮಾರ್, ‘ಸರ್ಕಾರ ಗಡುವಿನೊಳಗೆ ನಮ್ಮ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ, ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು. ಈ ಹೋರಾಟದಲ್ಲಿಲ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು, ಮಹಿಳೆಯರು ಸೇರಿದಂತೆ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ಎಚ್ಚರಿಕೆ ನೀಡಿದರು.

ಸಮಿತಿ ಪದಾಧಿಕಾರಿಗಳಾದ ಬಿ. ಅನ್ನದಾನಪ್ಪ, ಶಿವರಾಜ್, ಕಿರಣ್‍ಸೂರ್ಯ, ಕೃಷ್ಣಮೂರ್ತಿ ಟಿ., ಜಯರಾಮ್, ವಿಜಯ್‍ಕುಮಾರ್, ನವೀನ್, ಗಂಗಹನುಮಯ್ಯ, ಶ್ರೀಕಂಠ, ಲಕ್ಷ್ಮಣ್, ರಾಮಣ್ಣ, ಶಿವಮುತ್ತು, ರಾಜೇಂದ್ರ ಪ್ರಸಾದ್, ಪ್ರದೀಪ್, ಬಿ.ಎಲ್. ಲೋಕೇಶ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.