ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಟಿಕೆಟ್ ಪ್ರಯಾಣವು 500 ಕೋಟಿ ಟ್ರಿಪ್ ತಲುಪಿದ ಹಿನ್ನೆಲೆಯಲ್ಲಿ ರಾಮನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸುಗಳಿಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಾಚರಿಸಲಾಯಿತು.
ರಾಮನಗರ: ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಟಿಕೆಟ್ ಪ್ರಯಾಣವು 500 ಕೋಟಿ ಟ್ರಿಪ್ ತಲುಪಿದ ಹಿನ್ನೆಲೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು ನೇತೃತ್ವದಲ್ಲಿ ಸೋಮವಾರ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸುಗಳಿಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಾಚರಿಸಲಾಯಿತು.
ಈ ವೇಳೆ ಮಾತನಾಡಿದ ರಾಜು, ‘ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುವ ಮೊದಲೇ ನೀಡಿದ ಆಶ್ವಾಸನೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯಾದ್ಯಂತ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಪ್ರಮುಖವಾದ ಶಕ್ತಿ ಯೋಜನೆಯಲ್ಲಿ ಮಹಿಳಾ ಪ್ರಯಾಣಿಕರಿಗೆ ವಿತರಣೆ ಮಾಡಿದ ಉಚಿತ ಟಿಕೆಟ್ಗಳ ಸಂಖ್ಯೆ ಇಂದು 500 ಕೋಟಿ ತಲುಪಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.
‘ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡಿವೆ. ಜಿಲ್ಲೆಯಲ್ಲಿ 8 ಕೋಟಿಗೂ ಅಧಿಕ ಮಹಿಳೆಯರು ಪ್ರಯಾಣಿಸಿದ್ದು, ಒಟ್ಟು 229 ಕೋಟಿಗೂ ಹೆಚ್ಚಿನ ಹಣ ಖರ್ಚು ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಮಿತಿ ರಚಿಸಲಾಗಿದೆ. ಸಮಿತಿ ಸದಸ್ಯರುಗಳು ಫಲಾನುಭವಿಗಳಿಗೆ ಈ ಯೋಜನೆಯನ್ನು ತಲುಪಿಸಲು ಕ್ರಮ ವಹಿಸುತ್ತಿದ್ದಾರೆ’ ಎಂದು ಹೇಳಿದರು.
ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀಹರಿ ಬಾಬು, ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಎಸ್.ಸಿ. ಶೇಖರ್, ಶಿವಪ್ರಸಾದ್, ಸದಸ್ಯರು ಹಾಗೂ ರಾಮನಗರ ತಾಲ್ಲೂಕು ಗ್ಯಾರಂಟಿ ಅಧ್ಯಕ್ಷ ರಾಜು ವಿ.ಎಚ್., ಮಾಗಡಿ ಅಧ್ಯಕ್ಷ ಶಿವಣ್ಣ, ಹಾರೋಹಳ್ಳಿ ಅಧ್ಯಕ್ಷ ಅಶೋಕ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಶೋಭಾ, ಸ್ವಾಮಿ, ಭೈರವೇಶ್, ಜಯಣ್ಣ, ಕಾಳಮ್ಮ ಸೇರಿದಂತೆ ಕೆಎಸ್ಆರ್ಟಿಸಿಯ ಚಾಲಕರು, ನಿರ್ವಾಹಕರು, ಮಹಿಳಾ ಪ್ರಯಾಣಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.