ಮಾಗಡಿ: ಕಳೆದ ವಾರದಿಂದ ಪ್ರತಿ ಶುಕ್ರವಾರ ತಾಲ್ಲೂಕು ಕಚೇರಿಗೆ ಭೇಟಿ ರೈತರ ಸಮಸ್ಯೆಗಳ ಅರ್ಜಿ ಸ್ವೀಕರಿಸಿ ತಹಶೀಲ್ದಾರ್ ಮೂಲಕ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳನ್ನು ಆಡಳಿತ ಪಕ್ಷದವರು ಬಗೆಹರಿಸದ ಕಾರಣ ನಾನೇ ರೈತರಿಂದ ಅರ್ಜಿ ಸ್ವೀಕರಿಸಿ ಹಲವು ವರ್ಷಗಳ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ತಾಲ್ಲೂಕು ಕಚೇರಿಯಲ್ಲಿ ಕೆಲಸ ವಿಳಂಬವಾಗುತ್ತಿದೆ ಎಂಬ ದೂರಿನ ಹಿನ್ನೆಲೆ ನಾನೇ ಖುದ್ದಾಗಿ ಭೇಟಿ ನೀಡಿ ರೈತರಿಂದ ಅರ್ಜಿ ಸ್ವೀಕರಿಸಿ ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದರು.
ಮಾಜಿ ಶಾಸಕ ಎ.ಮಂಜುನಾಥ್ ಅವರು ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಸಮಯದಲ್ಲಿ 16ಕ್ಕೂ ಹೆಚ್ಚು ಅರ್ಜಿಗಳನ್ನು ರೈತರು ನೀಡಿದ್ದು ಇದರಲ್ಲಿ ಪ್ರಮುಖವಾಗಿ ನಕಾಶೆ ರಸ್ತೆ ಸಮಸ್ಯೆ, ಉಳುಮೆ ಚೀಟಿ, ಪೂರ್ವ ದಾಖಲಾತಿ, ರೆಕಾರ್ಡ್ ರೂಂನಲ್ಲಿ ದಾಖಲಾತಿಗಳು ಕಾಣೆಯಾಗಿವೆ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿದ್ದವು. ಈ ಬಗ್ಗೆ ಜಿಲ್ಲಾಧಿಕಾರಿಗಳನ್ನು ಕರೆಸಿ ರೈತರಿಗೆ ಸೂಕ್ತ ಪರಿಹಾರ ಸಿಗುವ ಕೆಲಸ ಆಗಬೇಕಿದೆ. ಇನ್ನೂ ಹಲವು ಸಮಸ್ಯೆಗಳ ಬಗ್ಗೆ ರೈತರು ಅರ್ಜಿ ಸಲ್ಲಿಸಿದ್ದಾರೆ ಮುಂದೆ ತಾಲ್ಲೂಕು ಪಂಚಾಯಿತಿ ಹಾಗೂ ಪುರಸಭೆಗೂ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ಈ ವೇಳೆ ತಹಶೀಲ್ದಾರ್ ಶರತ್ ಕುಮಾರ್, ಕೆಂಪೇಗೌಡ, ವಿಜಯಕುಮಾರ್, ದಂಡಿಗೆಪುರ ಕುಮಾರ್, ಬುಲೆಟ್ ರಾಮು, ಪವನ್, ಮಾನಗಲ್ ಶಿವರಾಮ್, ಕೃಷ್ಣ, ಬಿಸ್ಕೂರು ಸುಹೇಲ್, ನೇತೇನಹಳ್ಳಿ ಪುರುಷೋತ್ತಮ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.