ರಾಮನಗರ: ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸಲು ಪೊಲೀಸ್ ಠಾಣಾವಾರು ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ತಿಳಿಸಿದರು.
ಎಸ್ಪಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ರಸ್ತೆಗಳಲ್ಲಿ ಇರುವ ಉಬ್ಬುಗಳು, ತಿರುವುಗಳು ವಾಹನ ಚಾಲಕರಿಗೆ ಗೋಚರವಾಗುವುದಿಲ್ಲ. ರಸ್ತೆಗಳನ್ನು ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಜಂಟಿಯಾಗಿ ಪರಿಶೀಲಿಸಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಅಪಘಾತಗಳನ್ನು ತಡೆಯಬಹುದು ಎಂದರು.
ರಸ್ತೆ ಅಪಘಾತ ತಡೆಗಟ್ಟಲು ರಚಿಸಲಾಗಿರುವ ತಂಡದಲ್ಲಿ ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಅವಶ್ಯಕವಿದ್ದ ಕಡೆ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಇರುತ್ತಾರೆ. ತಂಡವು ವಾರಕೊಮ್ಮೆ ಸಭೆ ನಡೆಸಬೇಕು. ಉಪ ಪೊಲೀಸ್ ಅಧೀಕ್ಷಕರು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಜೊತೆ 15 ದಿನಗಳಿಗೊಮ್ಮೆ ಸಭೆ ನಡೆಸಬೇಕು. ರಸ್ತೆ ಅಪಘಾತದಲ್ಲಿ ಮೃತಪಡುವ ಪ್ರಕರಣಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸುತ್ತದೆ. ಇಲಾಖೆಯವರು ಮುಂಜಾಗ್ರತಾ ಕ್ರಮಗಳನ್ನು ಏಕೆ ವಹಿಸಲಿಲ್ಲ ಎಂದು ಪ್ರಶ್ನಿಸುತ್ತದೆ ಎಂದರು. ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುವುದು, ವಾಹನ ನಿಲುಗಡೆ ಇಲ್ಲದ ಪ್ರದೇಶಗಳಲ್ಲಿ ವಾಹನ ನಿಲುಗಡೆ ಮಾಡುವುದು, ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡುವುದನ್ನು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ತಿಳಿಸಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ರಮೇಶ್, ಮೋಹನ್ ಕುಮಾರ್, ಓಂ ಪ್ರಕಾಶ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವಿಜಯ್ ಗೋಪಾಲ್, ಗಂಗಾಧರಯ್ಯ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.