ADVERTISEMENT

ವಿದ್ಯಾರ್ಥಿಗಳು ಸಾಧನೆ ಮಾಡಬೇಕು: ಇಕ್ರಂ

​ಪ್ರಜಾವಾಣಿ ವಾರ್ತೆ
Published 22 ಜನವರಿ 2020, 16:32 IST
Last Updated 22 ಜನವರಿ 2020, 16:32 IST
ಚನ್ನಪಟ್ಟಣದಲ್ಲಿ ನಡೆದ ಎಸ್.ಎಸ್.ಎಲ್.ಸಿ. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರವನ್ನು ಸಿಇಒ ಇಕ್ರಂ ಉದ್ಘಾಟಿಸಿದರು
ಚನ್ನಪಟ್ಟಣದಲ್ಲಿ ನಡೆದ ಎಸ್.ಎಸ್.ಎಲ್.ಸಿ. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರವನ್ನು ಸಿಇಒ ಇಕ್ರಂ ಉದ್ಘಾಟಿಸಿದರು   

ಚನ್ನಪಟ್ಟಣ: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಸಾಧನೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಕರೆ ನೀಡಿದರು.

ಪಟ್ಟಣದ ಶತಮಾನೋತ್ಸವ ಭವನದಲ್ಲಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಬಗ್ಗೆ ಅಂಜಿಕೆ, ಸಂಕೋಚ, ಭಯ ಇರುತ್ತದೆ. ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಂಡಾಗ ಮಾತ್ರ ಭಯ, ಸಂಕೋಚ ನಿವಾರಣೆಯಾಗುತ್ತದೆ. ಸಮಯವನ್ನು ವ್ಯರ್ಥ ಮಾಡದೆ ಇರುವ ಸಮಯವನ್ನು ಸದ್ಬಳಕೆ ಮಾಡಿಕೊಂಡು ಪರೀಕ್ಷೆಗಾಗಿ ಸಮರ್ಥ ತಯಾರಿ ನಡೆಸಬೇಕು ಎಂದರು.

ADVERTISEMENT

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರಯ್ಯ ಮಾತನಾಡಿ, ವಿದ್ಯಾರ್ಥಿಗಳು ಮೊದಲು ಪರೀಕ್ಷಾ ಭಯವನ್ನು ಬಿಡಬೇಕು. ಕಾಲಹರಣ ಮಾಡದೆ ಪ್ರತಿಯೊಂದು ವಿಷಯವನ್ನು ಅಧ್ಯಯನ ಮಾಡಬೇಕು. ಹಿಂದಿನ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ನಿವಾರಿಸಿ ಪರೀಕ್ಷೆಗೆ ಸಿದ್ಧತೆ ನಡೆಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು ಮಾತನಾಡಿ, ಪಠ್ಯವಿಷಯಗಳಲ್ಲಿ ಎದುರಾಗುವ ಅನುಮಾನ ಹಾಗೂ ಪ್ರಶ್ನೆಗಳನ್ನು ತಮ್ಮ ಶಿಕ್ಷಕರ ಜೊತೆ ಚರ್ಚೆ ಮಾಡಿ ಅನುಮಾನವನ್ನು ಬಗೆಹರಿಸಿಕೊಳ್ಳಬೇಕು. ಪರೀಕ್ಷೆಯ ಸಂದರ್ಭದಲ್ಲಿ ವಿಚಲಿತರಾಗದೆ ಪರೀಕ್ಷೆಯನ್ನು ಎದುರಿಸಿ ತಾಲ್ಲೂಕಿಗೆ ಉತ್ತಮ ಫಲಿತಾಂಶವನ್ನು ನೀಡಬೇಕು ಎಂದರು.

ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಪಾರ್ವತಮ್ಮ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ವೀರಭದ್ರಯ್ಯ, ಗಣಿತ ವಿಷಯ ಪರಿವೀಕ್ಷಕ ಇಸ್ರತ್ ಜಾಹನ್, ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಶಿವಣ್ಣ, ಶಿಕ್ಷಣ ಸಂಯೋಜಕ ರಾಜಶೇಖರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.