
ಚನ್ನಪಟ್ಟಣ: ಕಬ್ಬು ಬೆಳೆಗಾರರು ಕಬ್ಬಿಗೆ ನಿಗದಿತ ಬೆಲೆ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಆಹೋರಾತ್ರಿ ಹೋರಾಟಕ್ಕೆ ಬೆಂಬಲ ಸೂಚಿಸಿ ರೈತಸಂಘದ ಪದಾಧಿಕಾರಿಗಳು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಗಾಂಧಿಭವನದ ಮುಂಭಾಗದಿಂದ ತಾಲ್ಲೂಕು ಕಚೇರಿವರೆಗೂ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಜಾಥಾ ನಡೆಸಿದ ಪ್ರತಿಭಟನಾಕಾರರು, ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕಬ್ಬು ಬೆಳೆಗಾರರ ಹಿತ ಕಾಯಲು ಆಗದ ಸರ್ಕಾರ ಹಾಗೂ ರಾಜಕಾರಣಿಗಳು ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಿತಕಾಯಲು ಮುಂದಾಗುತ್ತಿದ್ದಾರೆ. ಇಂತಹ ರೈತ ವಿರೋಧಿ ಸರ್ಕಾರ ವಿರುದ್ಧ ಮುಂದಿನ ದಿನಗಳಲ್ಲಿ ಸಾರ್ವಜನಿಕರು ದಂಗೆ ಏಳುವ ದಿನಗಳು ದೂರವಿಲ್ಲ ಎಂದು ಎಚ್ಚರಿಸಿದರು.
ರೈತ ಸಂಘದ ಹಿರಿಯ ಮುಖಂಡ ಕೆ.ಎನ್.ರಾಜು ಮಾತನಾಡಿ, ಗ್ಯಾರಂಟಿ ಕನಸಿನಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರೈತರ ಹಿತಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್, ಪದಾಧಿಕಾರಿ ಲಕ್ಷ್ಮಣ್, ರೈತಸಂಘದ ಪದಾಧಿಕಾರಿಗಳಾದ ಕೋದಂಡರಾಮು, ಸಿದ್ದರಾಜು, ಪುಟ್ಟಣ್ಣ, ಕೃಷ್ಣ, ವಿಶ್ವನಾಥ್, ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.