ಕೂಟಗಲ್(ರಾಮನಗರ): ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ತಮ್ಮ ಶಾಲೆಯನ್ನು ಮರೆಯದೆ, ತಮ್ಮಿಂದಾಗುವ ಸಹಕಾರ ಶಾಲೆಗಳ ಅಭಿವೃದ್ಧಿಗೆ ನೀಡುವುದು ಉತ್ತಮ ಬೆಳವಣಿಗೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಹೇಳಿದರು.
ಇಲ್ಲಿನ ಜಾಲಮಂಗಲ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬುಧವಾರ ನಡೆದ ನವೀಕರಣಗೊಂಡಿರುವ ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವ್ಯಾಸಂಗ ಮಾಡಿದ ಶಾಲೆ ಅಭಿವೃದ್ಧಿಗೆ ಕೊಠಡಿ, ಶೌಚಾಲಯ ಮುಂತಾದ ಕೊಡುಗೆ ಹಳೇ ವಿದ್ಯಾರ್ಥಿಗಳು ನೀಡಬೇಕು. ಇದರಿಂದ ಸರ್ಕಾರಿ ಶಾಲೆಗಳ ಉನ್ನತೀಕರಣವಾಗುವ ಜತೆಗೆ ಸಮಸ್ಯೆಗಳು ನಿವಾರಣೆಯಾಗುತ್ತವೆ. ಸರ್ಕಾರಿ ಶಾಲೆಯಲ್ಲಿ ಓದಿದ ಹಾಗೂ ಉನ್ನತ ಹುದ್ದೆ ಅಲಂಕರಿಸಿರುವ ಹಳೆ ವಿದ್ಯಾರ್ಥಿಗಳನ್ನು ಗುರುತಿಸಿ ಹೆಚ್ಚು ಸಂಘಗಳನ್ನು ರಚಿಸಲು ಪ್ರೋತ್ಸಾಹ ನೀಡಬೇಕು ಎಂದರು.
ಹಳೆ ವಿದ್ಯಾರ್ಥಿಗಳ ಸಂಯುಕ್ತ ಸಂಘದ ಅಧ್ಯಕ್ಷ ಎನ್.ಸುಬ್ಬಾಶಾಸ್ತ್ರಿ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಹಳೇ ವಿದ್ಯಾರ್ಥಿಗಳ ಪ್ರೋತ್ಸಾಹ, ಸಹಕಾರ ಸಿಗುವುದರಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದುತ್ತವೆ ಎಂದು ತಿಳಿಸಿದರು.
ಪೋಷಕರು ಖಾಸಗಿ ಶಾಲೆಗಳಿಗೆ ಮರುಳಾಗದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸಬೇಕು. ಸರ್ಕಾರ ಜಾರಿ ಮಾಡಿರುವ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಾಲಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮತಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರವಿಕುಮಾರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ನಾರಾಯಣಪ್ಪ, ಸರ್ಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕ ಜಿ.ಶಿವಶಂಕರ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಕೆ.ಶಿವರಾಮ್, ಹಳೆಯ ವಿದ್ಯಾರ್ಥಿಗಳ ಸಂಯುಕ್ತ ಸಂಘದ ಗೌರವಾಧ್ಯಕ್ಷ ಪ್ರೊ.ರೇವಣ್ಣ, ಉಪಾಧ್ಯಕ್ಷ ಸಿ. ಕುಮಾರಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷ ಬಿ. ನಂಜಪ್ಪ, ಗಂಗಾಧರಯ್ಯ, ಟಿ.ವಿ.ವೆಂಕಟಾಚಲಯ್ಯ, ಅಂಕೇಗೌಡ, ಮರಿಸ್ವಾಮಿ, ಜಗದೀಶ್ ಇದ್ದರು.
ಸರ್ಕಾರಿ ಶಾಲಾ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಸರ್ಕಾರಿ ಶಾಲಾ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಯುಕ್ತ ಸಂಘದ ಸಹಯೋಗದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.