ADVERTISEMENT

‌ಹೈಟೆಕ್ ಶಾಲೆ ನಿರ್ಮಾಣಕ್ಕೆ ಸರ್ವೆ: ವೈದ್ಯ ಡಾ.ವೆಂಕಟಪ್ಪ ಆರ್ಥಿಕ ನೆರವು

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 5:11 IST
Last Updated 20 ಜೂನ್ 2021, 5:11 IST
ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಸರ್ಕಾರಿ ಶಾಲಾ ಆವರಣದಲ್ಲಿ ಸರ್ವೆ ಕಾರ್ಯ ನಡೆಯಿತು
ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಸರ್ಕಾರಿ ಶಾಲಾ ಆವರಣದಲ್ಲಿ ಸರ್ವೆ ಕಾರ್ಯ ನಡೆಯಿತು   

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಯನ್ನು ಹೈಟೆಕ್ ಶಾಲೆಯಾಗಿ ಅಭಿವೃದ್ಧಿಪಡಿಸುವ ಕೆಲಸ ಆರಂಭಗೊಂಡಿದ್ದು, ಶಾಲಾ ಆವರಣದಲ್ಲಿ ಶುಕ್ರವಾರ ಸರ್ವೆ ಕಾರ್ಯ ಆರಂಭಿಸಲಾಯಿತು.

ಬೆಂಗಳೂರಿನ ಕಣ್ವ ಡಯಗ್ನೋಸ್ಟಿಕ್ ಸೆಂಟರ್ ವೈದ್ಯ ಡಾ.ವೆಂಕಟಪ್ಪ ಅವರು ತಾವು ಓದಿದ ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ಸಂಬಂಧ ಸರ್ಕಾರಕ್ಕೆ ಮನವಿ ಮಾಡಿದ್ದರು. ಅವರ ಮನವಿ ಮೇರೆಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.

ಬಳಿಕ ಶಾಲೆಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದರು. ಶಿಕ್ಷಣ ಸಚಿವರ ಸೂಚನೆ ಮೇರೆಗೆ ಹೊಂಗನೂರು ಶಾಲೆಯನ್ನು ಸುಸಜ್ಜಿತ ಶಾಲೆಯಾಗಿ ನಿರ್ಮಿಸುವ ಸಂಬಂಧ ಇದೀಗ ಸರ್ವೆ ಕಾರ್ಯ ಆರಂಭಿಸಲಾಗಿದೆ.

ADVERTISEMENT

ಮುಂದಿನ ದಿನಗಳಲ್ಲಿ ಸಮಗ್ರ ವರದಿ ಸಿದ್ಧಪಡಿಸಿ ಶಾಲೆಯ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಹೊಂಗನೂರು ಗ್ರಾಮದಲ್ಲಿ ಮಾದರಿ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದ್ದು, ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆ ಇಲ್ಲದಂತೆ ಹೈಟೆಕ್ ಶಾಲೆ ನಿರ್ಮಿಸಲು ಡಾ.ವೆಂಕಟಪ್ಪ ಅವರು ಅಭಿಲಾಷೆ ಹೊಂದಿದ್ದಾರೆ. ಇದಕ್ಕೆ ಅಗತ್ಯವಿರುವ ನೀಲನಕ್ಷೆ ತಯಾರಿಸಲು ತಿಳಿಸಿರುವ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ಆರಂಭಗೊಂಡಿದೆ’ ಎಂದು ಸ್ಥಳದಲ್ಲಿ ಹಾಜರಿದ್ದ ಶಿಕ್ಷಣ ಸಂಯೋಜಕ ಗಂಗಾಧರಮೂರ್ತಿ ತಿಳಿಸಿದರು.

ಶಾಲೆಯ ಶಿಕ್ಷಕರು, ಶಿಕ್ಷಣ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.