ADVERTISEMENT

ರಾಮನಗರ | ಅವಧಿ ಮೀರಿದ ಔಷಧ ಬಳಸಿದರೆ ಅಮಾನತು: ಜಿಲ್ಲಾಧಿಕಾರಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 15:29 IST
Last Updated 13 ಜುಲೈ 2024, 15:29 IST
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಲಸಿಕೆ ಕಾರ್ಯಪಡೆ ಸಮಿತಿ ಸಭೆಯಲ್ಲಿ  ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಆರ್‌ಸಿಎಚ್ ಅಧಿಕಾರಿ ಡಾ. ರಾಜು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್ ಹಾಗೂ ಇತರರು ಇದ್ದಾರೆ
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಲಸಿಕೆ ಕಾರ್ಯಪಡೆ ಸಮಿತಿ ಸಭೆಯಲ್ಲಿ  ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಆರ್‌ಸಿಎಚ್ ಅಧಿಕಾರಿ ಡಾ. ರಾಜು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್ ಹಾಗೂ ಇತರರು ಇದ್ದಾರೆ   

ರಾಮನಗರ: ‘ಜಿಲ್ಲೆಯಲ್ಲಿ ಯಾರಾದರೂ ಅವಧಿ ಮೀರಿದ ಔಷಧಗಳ ಬಳಕೆ ಅಥವಾ ವಿತರಣೆ ಮಾಡಿದರೆ ಸಂಬಂಧಿಸಿದವರನ್ನು ಮುಲಾಜಿಲ್ಲದೆ ಅಮಾನತು ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಲಸಿಕೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ರಾಮನಗರಕ್ಕೆ ಕೂಗಳತೆ ದೂರದಲ್ಲಿರುವ ಬೆಂಗಳೂರಿನಿಂದ ಆರೋಗ್ಯ ಇಲಾಖೆಗೆ ಅಗತ್ಯವಿರುವ ಔಷಧ ಮತ್ತು ಮಾತ್ರೆಗಳನ್ನು ತರಲು ಕಷ್ಟವಾದರೂ ಏನಿದೆ?’ ಎಂದು ಪ್ರಶ್ನಿಸಿದರು.

‘ಔಷಧ– ಮಾತ್ರೆಗಳ ಅವಧಿಯನ್ನು ಗಮನಿಸಿಯೇ ರೋಗಿಗಳಿಗೆ ಕೊಡಬೇಕು. ಅದರಲ್ಲೂ ಮಕ್ಕಳಿಗೆ ನೀಡುವ ಲಸಿಕೆಯನ್ನು ಎರಡೆರಡು ಬಾರಿ ಪರೀಕ್ಷಿಸಿ ನೀಡಬೇಕು. ಅವಧಿ ಮೀರಿದ ಔಷಧಗಳ ಬಳಕೆ ಸಲ್ಲದು. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ವೈಯಕ್ತಿಕವಾಗಿ ಗಮನ ಹರಿಸಬೇಕು. ಆಸ್ಪತ್ರೆಗಳಲ್ಲಿ ಹಾವು ಕಡಿತ ಔಷಧ ಸಿದ್ಧವಿಟ್ಟುಕೊಂಡಿರಬೇಕು. ಇಲಾಖೆಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳ ತಕ್ಷಣ ನೀಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ‘ಜಿಲ್ಲೆಯಲ್ಲಿ ಇದುವರೆಗೆ 93 ಡೆಂಗಿ ಪ್ರಕರಣಗಳು ವರದಿಯಾಗಿವೆ. ಡೆಂಗಿ ಲಕ್ಷಣಗಳು ಪತ್ತೆಯಾದರೆ ಜಿಲ್ಲಾಸ್ಪತ್ರೆಯಲ್ಲಿ ತೆರೆಯಲಾಗಿರುವ ವಾರ್ ರೂಮ್ ಸಂಖ್ಯೆ: 9449843266 ಗೆ ಸಾರ್ವಜನಿಕರು ಸಂಪರ್ಕಿಸಬಹುದು. ಇದು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ’ ಎಂದು ಸಭೆಯ ಗಮನಕ್ಕೆ ತಂದರು.

ಆರ್‌ಸಿಎಚ್ ಅಧಿಕಾರಿ ಡಾ. ರಾಜು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಶಶಿಧರ್, ಜಿಲ್ಲಾ ಕ್ಷಯರೋಗ ನಿಯಂತ್ರಣಧಿಕಾರಿ ಡಾ. ಕುಮಾರ್, ಚನ್ನಪಟ್ಟಣ, ರಾಮನಗರ, ಕನಕಪುರ ಹಾಗೂ ಮಾಗಡಿ ತಾಲ್ಲೂಕು ಆರೋಗ್ಯಾಧಿಕಾರಿಗಳು, ಇತರ ಅಧಿಕಾರಿಗಳು ಸಭೆಯಲ್ಲಿದ್ದರು.

ಜಿಲ್ಲೆಯಲ್ಲಿ 93 ಡೆಂಗಿ ಪ್ರಕರಣ ವರದಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗಿ ವಾರ್‌ ರೂಂ ವಾರ್ ರೂಂ ಸಂಖ್ಯೆ: 9449843266
ಸಭೆಯಲ್ಲಿ ‘ಪ್ರಜಾವಾಣಿ’ ವರದಿ ಪ್ರಸ್ತಾಪ
ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಡೆಂಗಿ ರೋಗಿಗೆ ಅವಧಿ ಮೀರಿದ ಗ್ಲುಕೋಸ್ ನೀಡಿದ ಕುರಿತು ‘ಪ್ರಜಾವಾಣಿ’ಯಲ್ಲಿ ಎರಡು ದಿನಗಳ ಹಿಂದೆ (ಜುಲೈ 10) ಪ್ರಕಟವಾಗಿದ್ದ ವರದಿಯನ್ನು ಜಿಲ್ಲಾಧಿಕಾರಿ ಸಭೆಯಲ್ಲಿ ಪ್ರಸ್ತಾಪಿಸಿದರು. ‘ಲಸಿಕೆಗಳು ಔಷಧಗಳು ಮಾತ್ರೆ ಸೇರಿದಂತೆ ವೈದ್ಯಕೀಯ ಸಾಮಗ್ರಿಗಳ ದಾಸ್ತಾನು ತೆಗೆದುಕೊಳ್ಳುವಾಗ ಅವುಗಳ ಅವಧಿಯನ್ನು ಸಹ ಪರಿಶೀಲಿಸಬೇಕು. ದಾಸ್ತಾನಿರಿಸಿದ ಔಷಧಗಳ ಅವಧಿ ಮುಗಿದ್ದಿದ್ದರೆ ವಿಲೇವಾರಿಗೆ ಕ್ರಮ ವಹಿಸಬೇಕು. ಮಾಗಡಿಯಲ್ಲಿ ರೋಗಿಯೊಬ್ಬರಿಗೆ ಅವಧಿ ಮೀರಿದ ಗ್ಲುಕೋಸ್ ನೀಡಿದ ಪ್ರಕರಣ ಮತ್ತೆ ಮರುಕಳಿಸಿದರೆ ಸಂಬಂಧಿಸಿದವರನ್ನೇ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.