ರಾಮನಗರ: ‘ಕ್ಷಯ ರೋಗ ಪತ್ತೆಯಾದಲ್ಲಿ ಅವರಿಗೆ ಉಚಿತವಾದ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸೆ ನೀಡಲಾಗುವುದು. ಈ ಸೌಲಭ್ಯವು ಹತ್ತಿರದ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಟಿ.ಅಮರ್ನಾಥ್ ಹೇಳಿದರು.
ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಆವರಣದಲ್ಲಿ ಸೋಮವಾರ ನಡೆದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಾಂಕ್ರಾಮಿಕ ಕ್ಷಯ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಕ್ಷಯರೋಗ ಪತ್ತೆ ಆಂದೋಲನವನ್ನು ಇಂದಿನಿಂದ ಇದೇ 27ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಸುಸೂತ್ರವಾಗಿ ನಡೆಸಲು ಆರೋಗ್ಯ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಕ್ಷಯ ರೋಗದ ಮುಖ್ಯ ಲಕ್ಷಣಗಳಾದ ಕೆಮ್ಮು, ಸಂಜೆ ವೇಳೆ ಜ್ವರ ಬರುವುದು, ತೂಕ ಕಡಿಮೆಯಾಗುವುದು, ಹಸಿವಾಗದೇ ಇರುವುದು ಕಂಡು ಬಂದರೆ ಅವರಿಂದ ಕಫ ಶೇಖರಣೆ ಮಾಡಿ ಅದನ್ನು ಆಸ್ಪತ್ರೆಗೆ ಸಾಗಿಸಿ ಪರೀಕ್ಷೆಗೆ ಒಳಪಡಿಸಲಾಗುವುದು ಎಂದರು.
ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಅರುಣ್ ಕುಮಾರ್ ಹಾಗೂ ರೋಟರಿ ಸಿಲ್ಕ್ ಸಿಟಿ ಕ್ಲಬ್ ನ ಪದಾಧಿಕಾರಿಗಳಾದ ಗೋಪಾಲ್, ಆರ್. ರಾಘವೇಂದ್ರ, ಲತಾ ಗೋಪಾಲ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.