ಚನ್ನಪಟ್ಟಣ: ‘ನಮ್ಮಿಂದ ವಿಭಜನೆಯಾದ ದೇಶಗಳು ಇಂದು ಅರಾಜಕತೆಗೆ ಸಿಲುಕಿ ನಲುಗುತ್ತಿವೆ. ಆದರೆ ನಮ್ಮ ದೇಶದಲ್ಲಿ ಸಾರ್ವಭೌಮತೆಗೆ ಯಾವುದೇ ಧಕ್ಕೆಯಾಗಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದರು.
ನಗರದ ಅಂಬೇಡ್ಕರ್ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿ ನಂತರ ಬಿಜೆಪಿ ತಾಲ್ಲೂಕು ಘಟಕದ ಕಚೇರಿಯಲ್ಲಿ ನಡೆದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಬಾಂಗ್ಲಾ, ಪಾಕಿಸ್ತಾನ ಮಾತ್ರವಲ್ಲದೆ ನಮ್ಮ ನೆರೆಯ ರಾಷ್ಟ್ರಗಳಾದ ಶ್ರೀಲಂಕಾ, ನೇಪಾಳ, ಬರ್ಮಾ, ಅಘ್ಗಾನಿಸ್ಥಾನಗಳಲ್ಲಿ ಏನಾಗುತ್ತಿದೆ ಎಂಬುದು ತಿಳಿದ ವಿಚಾರ. ಆದರೆ ನಮ್ಮ ದೇಶ ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ. ಇದಕ್ಕೆ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನ ಕಾರಣ’ ಎಂದರು.
‘ಅಸ್ಪೃಶ್ಯತೆ, ಸಮಾನತೆಯನ್ನು ತೊಡೆದು ಹಾಕಿ ಎಲ್ಲರೂ ಸಮಾನರು ಎಂಬುದನ್ನು ಸಂವಿಧಾನದ ಮೂಲಕ ಅಂಬೇಡ್ಕರ್ ಅವರು ಸಾರಿ ಹೇಳಿದರು. ನಮಗೆಲ್ಲಾ ಇಂದು ಬಾಬಾ ಸಾಹೇಬರು ರಚಿಸಿಕೊಟ್ಟ ಸಂವಿಧಾನವೇ ಪ್ರಮುಖವಾಗಿದ್ದು, ಯಾವ ಧರ್ಮ, ಜಾತಿಯವರಾಗಿದ್ದರೂ ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ನಿಯಮಗಳನ್ನು ಪಾಲಿಸಲೇಬೇಕು, ಸಂವಿಧಾನವನ್ನು ನಾವೆಲ್ಲರೂ ಗೌರವಿಸಬೇಕು’ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಂಪುರ ಮಲುವೇಗೌಡ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ಟಿ.ಜಯರಾಮು, ನಗರ ಬಿಜೆಪಿ ಅಧ್ಯಕ್ಷ ಶಿವಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಲೇಕೇರಿ ರವೀಶ್, ಮುಖಂಡರಾದ ರಾಮಚಂದ್ರು, ಶಿವಲಿಂಗಯ್ಯ, ಸದಾನಂದ, ಹುಣಸನಹಳ್ಳಿ ಕೃಷ್ಣಪ್ಪ, ಎಸ್.ಸಿ.ಶೇಖರ್, ಎಂ.ಎನ್.ಆನಂದಸ್ವಾಮಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.