ADVERTISEMENT

ರಾಮನಗರ: ಭೂ ಖರೀದಿಯಲ್ಲಿ ಸುಧಾರಣೆ ತರಲು ಚಿಂತನೆ: ಡಾ.ಸಿ.ಎನ್. ಅಶ್ವತ್ಥನಾರಾಯಣ

ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 14:15 IST
Last Updated 26 ಜನವರಿ 2020, 14:15 IST
ಭಾನುವಾರ ಫಲಪುಷ್ಪ ಪ್ರದರ್ಶನಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು
ಭಾನುವಾರ ಫಲಪುಷ್ಪ ಪ್ರದರ್ಶನಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು   

ರಾಮನಗರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಭೂ ಖರೀದಿಯಲ್ಲಿ ಸುಧಾರಣೆ ತರಲು ಉದ್ದೇಶಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಇಲ್ಲಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮುಖ್ಯಮಂತ್ರಿ ನಾಯಕತ್ವದಲ್ಲಿ ರಾಜ್ಯ ಮತ್ತು ಜಿಲ್ಲೆ ಸಾಕಷ್ಟು ಪ್ರಗತಿ ಕಾಣಲಿದೆ. ಅಭಿವೃದ್ಧಿಯ ವೇಗ ಹೆಚ್ಚಲಿದೆ. ಜಿಲ್ಲೆಯ ಕೈಗಾರಿಕಾ ಕ್ಷೇತ್ರ ಪ್ರಗತಿ ಸಾಧಿಸಲಿದೆ. ಬಂಡವಾಳ ಹೂಡಿಕೆಗೆ ಅಡೆತಡೆಗಳ ನಿವಾರಣೆಗೆ ಸರ್ಕಾರ ಮುಂದಾಗಿದೆ. ಸಮಸ್ಯೆಗಳನ್ನು ಅರಿತು ಕೊಳ್ಳುತ್ತಿದ್ದೇವೆ. ಉತ್ತಮ ಮಾರುಕಟ್ಟೆಯನ್ನು ಕಲ್ಪಿಸುತ್ತೇವೆ ಎಂದು ತಿಳಿಸಿದರು.

ಜೂನ್ 1ರಂದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ 25 ವರ್ಷ ತುಂಬಲಿದೆ. ಅದೇ ದಿನ ರಾಮನಗರದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರೆವೇರಿಸಲಾಗುವುದು. ಸರ್ಕಾರದ ಭೂಮಿ, ಸ್ವಾಧೀನ ಪಡಿಸಿಕೊಂಡಿರುವ ಭೂಮಿಯಲ್ಲಿ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಸಮಸ್ಯೆ ಇರುವ ಭೂಮಿಯ ಮಾಲೀಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ನಿವಾರಿಸುವುದಾಗಿ ಅವರು ಹೇಳಿದರು.

ADVERTISEMENT

ರೇಷ್ಮೆ ಕ್ಷೇತ್ರದ ಅಭಿವೃದ್ದಿಗೆ ವೈಜ್ಞಾನಿಕ ದೃಷ್ಠಿಕೋಣದಲ್ಲಿ ಪ್ರೋತ್ಸಾಹ ನೀಡಲು ಚಿಂತನೆಗಳು ನಡೆದಿವೆ. ಈ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಡಲಿದ್ದೇವೆ, ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯ ಸಹ ಅಭಿವೃದ್ದಿಯ ಪಥದಲ್ಲಿದ್ದು, ಕೃಷಿ ಕ್ಷೇತ್ರಕ್ಕೂ ಅನುಕೂಲವಾಗುವಂತೆ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ, ಶೀಥಲ ಸಂಗ್ರಹಣಾ ಘಟಕಗಳ ಸ್ಥಾಪನೆಯನ್ನು ಪಿಪಿಪಿ ಮಾಡೆಲ್‌ನಲ್ಲಿ ಸ್ಥಾಪಿಸಲು ಗಂಭೀರ ಚಿಂತನೆಗಳು ನಡೆದಿವೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಇತ್ತೀಚೆಗೆ ದಾವೋಸ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಮೌಲ್ಯವರ್ಧಿತ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಂಸ್ಥೆಗಳಿಗೆ ಆಹ್ವಾನ ನೀಡಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಗಳನ್ನು ಬಲಗೊಳಿಸಿ, ರೈತರು ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

ಚನ್ನಪಟ್ಟಣದ ಬೊಂಬೆ ಉದ್ಯಮಕ್ಕೆ ಸಂಬಂಧಿಸಿದಂತೆ ಕಾಮನ್ ಫೆಸಿಲಿಟಿ (ಸಾಮಾನ್ಯ ಅಗತ್ಯ ಸೇವೆ) ಲಭ್ಯವಾಗುತ್ತಿದೆ. ಗ್ರಾಹಕರಿಗೆ ನೇರ ಗೊಂಬೆ ಮಾರಾಟಕ್ಕೆ ಸ್ಥಳದ ಕೊರೆತೆ ಇದೆ. ಆರ್ಟ್ ಅಂಡ್ ಕ್ರಾಫ್ ವಿಲೇಜ್ ಸ್ಥಾಪನೆಗೆ ಹೆದ್ದಾರಿ ಪಕ್ಕದಲ್ಲೇ ಸ್ಥಳ ಕಲ್ಪಿಸಿಕೊಡಲು ಜಿಲ್ಲಾಧಿಕಾರಿ ಬಳಿ ಚರ್ಚಿಸುತ್ತೇನೆ ಎಂದು ತಿಳಿಸಿದರು.

ಹಾರೋಹಳ್ಳಿ ತಾಲ್ಲೂಕು ರಚನೆಗೆ ಅಗತ್ಯ ಸಹಕಾರ ನೀಡಲಾಗುವುದು. ಕನಕಪುರದ ಕಪಾಲ ಬೆಟ್ಟದ ಬಗ್ಗೆ ಜಿಲ್ಲಾಡಳಿತದಿಂದ ವರದಿ ಸಲ್ಲಿಕೆಯಾಗಿದೆಯೇ ಎಂದು ಕೇಳಿದಾಗ ಆ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.