ADVERTISEMENT

ರಾಮನಗರ: ಕೋವಿಡ್ ಸೋಂಕಿಗೆ ಟಿಕೆಎಂ ಉದ್ಯೋಗಿ ಬಲಿ

ಭಾಷ್‌ ಕಂಪನಿ ಉದ್ಯೋಗಿಗಳಲ್ಲೂ ಸೋಂಕಿನ ಸಂಖ್ಯೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 14:55 IST
Last Updated 6 ಜುಲೈ 2020, 14:55 IST
   

ರಾಮನಗರ: ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯ ಉದ್ಯೋಗಿಯೊಬ್ಬರು ಕೋವಿಡ್‌-19 ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

46 ವಯಸ್ಸಿನ ಅವರು ಬೆಂಗಳೂರಿನ ನಿವಾಸಿಯಾಗಿದ್ದು, ಹಲವು ದಿನದ ಹಿಂದೆ ಸೋಂಕಿಗೆ ತುತ್ತಾಗಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಕೊನೆಯುಸಿರು ಎಳೆದರು. ಇವರ ತಂದೆಯೂ ಇದೇ ತಿಂಗಳ 2ರಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಟಿಕೆಎಂ ಆಡಳಿತ ಮಂಡಳಿ ಸಂತಾಪ ಸೂಚಿಸಿದೆ. "ಮೃತ ವ್ಯಕ್ತಿ ಕಡೆಯದಾಗಿ ಜೂನ್‌ 23ರಂದು ಕೆಲಸಕ್ಕೆ ಹಾಜರಾಗಿದ್ದರು. ಕಳೆದ 15 ದಿನಗಳಿಂದ ಕೆಲಸಕ್ಕೆ ಬಂದಿರಲಿಲ್ಲ. ಸಿಬ್ಬಂದಿಯ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಕಾರ್ಖಾನೆ ಆವರಣವನ್ನು ಸ್ಯಾನಿಟೈಸ್‌ ಮಾಡಲಾಗಿದ್ದು, ಮಂಗಳವಾರ ಕಂಪನಿ ಎಂದಿನಂತೆ ಕಾರ್ಯ ನಿರ್ವಹಿಸಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಸೋಂಕಿತರ ಸಂಖ್ಯೆ ಏರಿಕೆ: ಬಿಡದಿಯಲ್ಲಿರುವ ಮತ್ತೊಂದು ಪ್ರಮುಖ ಕಂಪನಿಯಾದ ಭಾಷ್‌ ಕಂಪನಿಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಸೋಮವಾರ ಸಂಜೆ ವೇಳೆಗೆ ಕಂಪನಿಯ 60ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಸೋಂಕಿತರಲ್ಲಿ ಬಹುತೇಕರು ಬೆಂಗಳೂರಿನವರೇ ಆಗಿದ್ದಾರೆ. 182 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.