ಬಿಡದಿ: ಸಹೋದ್ಯೋಗಿಗಳ ಅಮಾನತು ಆದೇಶದ ವಿರುದ್ಧ ಟೊಯೊಟಾ ಕಾರ್ಮಿಕರು ನಡೆಸುತ್ತಿರುವ ಮುಷ್ಕರ ಬುಧವಾರ ಹತ್ತನೇ ದಿನಕ್ಕೆ ಕಾಲಿಟ್ಟಿದೆ.ಕಾರ್ಮಿಕರ ಹೋರಾಟವನ್ನು ಬೆಂಬಲಿಸಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಮುಷ್ಕರದಲ್ಲಿ ಭಾಗವಹಿಸಿದ್ದರು. ಈಗಾಗಲೇ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಸೇರಿದಂತೆ ಹತ್ತು ಹಲವು ಸಂಘಟನೆಗಳು, ಸಂಘ, ಸಂಸ್ಥೆಗಳು ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿವೆ.
ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ, ‘ನಮ್ಮ ನೆಲದಲ್ಲಿ ಕಾರ್ಮಿಕರಿಗೆ ಅನ್ಯಾಯವಾದರೆ ಅವರ ಪರ ಧ್ವನಿ ಎತ್ತುವುದು ನಮ್ಮೆಲ್ಲರ ಕರ್ತವ್ಯ. ಸುಮಾರು 17 ಸಾವಿರ ಕುಟುಂಬಗಳು ಬೀದಿಗೆ ಬಿದ್ದರೆ ಅವರನ್ನು ರಕ್ಷಿಸುವ ಜವಾಬ್ದಾರಿ ನಮ್ಮದಾಗಿರುತ್ತದೆ’ ಎಂದರು.
ಟೊಯೊಟಾ ಆಡಳಿತ ಮಂಡಳಿಯೊಂದಿಗೆ ಮಂಗಳವಾರ ನಡೆದ ಮಾತುಕತೆ ವಿಫಲವಾದ್ದರಿಂದ ಮುಷ್ಕರ ಮುಂದುವರಿಯಲಿದೆ. ಬೇಡಿಕೆ ಈಡೇರಿದರೆ ಮಾತ್ರ ಕಾರ್ಮಿಕರು ಕೆಲಸಕ್ಕೆ ಹಾಜರಾಗುತ್ತಾರೆ ಎಂದು ಕಾರ್ಮಿಕರ ಸಂಘ
ಸ್ಪಷ್ಟವಾಗಿ ಹೇಳಿದೆ.
ಲಾಕ್ಔಟ್ ನಿಷೇಧಿಸಿ ಸರ್ಕಾರ ಆದೇಶ: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಾರ್ಖಾನೆ ನೌಕರರು ನಡೆಸುತ್ತಿರುವ ಮುಷ್ಕರವನ್ನು ನಿಷೇಧಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಕಾರ್ಖಾನೆಯ ಲಾಕ್ಔಟ್ ತೆರವಿಗೂ ಸೂಚಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.