ಚನ್ನಪಟ್ಟಣ: ತಾಲ್ಲೂಕಿನ ಬಿ.ವಿ. ಪಾಳ್ಯ ಗ್ರಾಮದಲ್ಲಿ ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ.
ಬಿ.ವಿ. ಪಾಳ್ಯ ಗ್ರಾಮದ ಶ್ರೀನಿವಾಸ ಅಲಿಯಾಸ್ ಸೀನಾ (36) ಮತ್ತು ಬೆಂಗಳೂರು ಕಾಡುಗೋಡಿಯ ನಾಗರಾಜ ಅಲಿಯಾಸ್ ನಾಗ (42) ಬಂಧಿತರು.
ತಾಲ್ಲೂಕಿನ ಬಿ.ವಿ. ಪಾಳ್ಯ ಗ್ರಾಮದ ಅಗರಬತ್ತಿ ವ್ಯಾಪಾರಿ ಶಂಕರ್ ಎಂಬಾತನ ತಲೆಗೆ ಕಬ್ಬಿಣದ ರಾಡಿನಿಂದ ಹೊಡೆದು ಜೂ. 29ರಂದು ಕೊಲೆ ಮಾಡಲಾಗಿತ್ತು. ಈ ಬಗ್ಗೆ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
‘ಇದು ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ನಡೆದಿರುವ ಕೊಲೆಯಾಗಿದೆ. ಇದರ ಬಗ್ಗೆ ಮಾಹಿತಿ ಕಲೆ ಹಾಕಿ ಇಬ್ಬರು ಆರೋಪಿಗಳು ಕೆಂಗೇರಿಯ ಮನೆಯೊಂದರಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಯಿತು’ ಎಂದು ಪೊಲೀಸರು
ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸರ ಕಾರ್ಯವನ್ನು ಎಸ್.ಪಿ ಗಿರೀಶ್, ಡಿವೈಎಸ್ಪಿ ರಮೇಶ್, ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅಭಿನಂದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.