ಮಾಗಡಿ: ಪುಲ್ವಾಮ ಘಟನೆಯ ಬಗ್ಗೆ ಸಂಶಯ ಸಲ್ಲದು. ದೇಶ ರಕ್ಷಣೆಯ ವಿಚಾರದಲ್ಲಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೆ ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಬಿಜೆಪಿ ಮುಖಂಡ ಪ್ರಸಾದ್ ಗೌಡ ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಸೈನಿಕರ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವ ಶಾಸಕರು ಕೂಡಲೇ ಕ್ಷಮೆ ಕೇಳಬೇಕು. ದೇಶದ ಭದ್ರತೆಯ ಬಗ್ಗೆ ನಿಮಗೆ ಸಂಶಯವಿದೆಯೇ? ಬ್ರಿಟಿಷರಿಂದ ಆರಂಭವಾದ ಕಾಂಗ್ರೆಸ್ ಪಕ್ಷದಲ್ಲಿ ಇರುವ ನೀವು ಬ್ರಿಟಿಷರಿದ್ದಂತೆ ಎಂದು ಆರೋಪಿಸಿದರು.
ತಾಲ್ಲೂಕಿಗೆ ಹೇಮಾವತಿ ನದಿ ನೀರು ಕೊಡುವುದಿಲ್ಲ ಎನ್ನುವ ಶಾಸಕ ಸುರೇಶ್ ಗೌಡ ಅವರ ಹೇಳಿಕೆ ಬಗ್ಗೆ ಏಕೆ ಮೌನವಾಗಿದ್ದೀರಿ? ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ದಿ ಮಾಡುವುದಾಗಿ ಹೇಳಿದ್ದಿರಿ. ಶಾಸಕರಾದ ಮೇಲೆ ಅಭಿವೃದ್ಧಿ ಕೆಲಸ ಏಕೆ ಮಾಡಲಿಲ್ಲ. ನಿಮ್ಮ ಪಕ್ಷದ ನಾಯಕರನ್ನು ಮೆಚ್ಚಿಸಲು ಬಾಯಿಗೆ ಬಂದಂತೆ ಮಾತನಾಡಬೇಡಿ. ಮೋದಿ ಮತ್ತು ಸೈನಿಕರ ಬಗ್ಗೆ ಅಗೌರವವಾಗಿ ಮಾತನಾಡಿರುವ ನಿಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆ ಯಾಚಿಸದಿದ್ದರೆ ನಿಮಗೆ ಉಳಿಗಾಲವಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರೇ ನಿಮಗೆ ತಕ್ಕಪಾಠ ಕಲಿಸುವರು. ಬಾಲಕೃಷ್ಣ ಅವರು ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಅವರು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಿರುಮಲೆ ನಾರಾಯಣಸ್ವಾಮಿ, ಗುರುಸಿದ್ದಪ್ಪ, ವೀರಭದ್ರಯ್ಯ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.