ಚನ್ನಪಟ್ಟಣ: ಮಹರ್ಷಿ ವಾಲ್ಮೀಕಿ ಅವರು ಹಿಂದೂ ಮಹಾಕಾವ್ಯ ರಾಮಾಯಣ ರಚಿಸುವ ಮೂಲಕ ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ತಹಶೀಲ್ದಾರ್ ಬಿ.ಎನ್.ಗಿರೀಶ್ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಮಹಾನ್ ಗ್ರಂಥವಾಗಿರುವ ರಾಮಾಯಣ ಎಲ್ಲಾ ಭಾಷೆಗಳ ಸಾಹಿತ್ಯ ಕ್ಷೇತ್ರಕ್ಕೆ ಅಡಿಪಾಯವಾಗಿದೆ. ಭಾರತೀಯ ಸಂಸ್ಕೃತಿಯನ್ನು ಆದರ್ಶವಾಗಿ ಪ್ರತಿನಿಧಿಸುವ ರಾಮಾಯಣ ಮಕ್ಕಳಿಂದ ವೃದ್ಧರವರೆವಿಗೂ ಓದುಗರನ್ನು ಆಕರ್ಷಿಸುತ್ತದೆ. ಇಂತಹ ಮಹಾನ್ ಕಾವ್ಯ ರಚಿಸಿದ ವಾಲ್ಮೀಕಿ ಮಹರ್ಷಿ ಭಾರತೀಯರ ಹೃದಯದಲ್ಲಿ ಅಜರಾಮರರಾಗಿ ಉಳಿದಿದ್ದಾರೆ ಎಂದು ಶ್ಲಾಘಿಸಿದರು.
ನಗರಸಭೆ ಪೌರಾಯುಕ್ತ ಮಹೇಂದ್ರ, ತಾ.ಪಂ.ಇಒ ಎಲ್.ಸಂದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿದ್ದರಾಜು, ಸಿಡಿಪಿಒ ಪ್ರಮೀಳಾ, ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳಾದ ಮಲ್ಲಿಕಾರ್ಜುನ, ಡಾ.ಕೃಷ್ಣಮೂರ್ತಿ, ಶಿವಕುಮಾರ್, ಮಧುರಾ, ಸರೋಜಾ, ಪುಷ್ಪ, ಅಂಜನಮೂರ್ತಿ, ಸಮುದಾಯದ ಮುಖಂಡರು, ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.