ADVERTISEMENT

ಗಣಿಗಾರಿಕೆ ನಿಷೇಧಿಸಿ: ಹೋರಾಟಗಾರ ವಾಟಾಳ್‌ ನಾಗರಾಜ್ ಒತ್ತಾಯ

ಗಣಿ ಸ್ಫೋಟ: ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 0:54 IST
Last Updated 25 ಜನವರಿ 2021, 0:54 IST
ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಗಣಿ ಸ್ಫೋಟ ದುರಂತದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ ರಾಮನಗರದಲ್ಲಿ ವಾಟಾಳ್ ನಾಗರಾಜ್‌ ನೇತೃತ್ವದಡಿ ಪ್ರತಿಭಟನೆ ನಡೆಯಿತು
ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಗಣಿ ಸ್ಫೋಟ ದುರಂತದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ ರಾಮನಗರದಲ್ಲಿ ವಾಟಾಳ್ ನಾಗರಾಜ್‌ ನೇತೃತ್ವದಡಿ ಪ್ರತಿಭಟನೆ ನಡೆಯಿತು   

ರಾಮನಗರ: ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಗಣಿ ಸ್ಫೋಟ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವುದರ ಜತೆಗೆ ರಾಜ್ಯದಲ್ಲಿ ಗಣಿಗಾರಿಕೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಭಾನುವಾರ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌ ನೇತೃತ್ವದಡಿ ಪ್ರತಿಭಟನೆ ನಡೆಯಿತು.

ನಗರದ ಐಜೂರು ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ವಾಟಾಳ್ ನಾಗರಾಜ್‌ ಮಾತನಾಡಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹದ್ದುಮೀರಿ ನಡೆದುಕೊಳ್ಳುತ್ತಿದ್ದಾರೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಯಾವುದೇ ಕಾರಣಕ್ಕೂ ಠಾಕ್ರೆ ವಾದ ಒಪ್ಪುವ ಪ್ರಶ್ನೆಯೇ ಇಲ್ಲ. ಮತ್ತೊಮ್ಮೆ ಈ ರೀತಿ ಹೇಳಿಕೆ ನೀಡಬಾರದು. ಎಂಇಎಸ್ ಅನ್ನು ಹದಿನೈದು ದಿನದೊಳಗೆ ನಿಷೇಧ ಮಾಡಬೇಕು. ಮಹಾರಾಷ್ಟ್ರ ಏಕೀಕರಣ ಸಮಿತಿ ಕರ್ನಾಟಕದಲ್ಲಿ ಇರಬಾರದು. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು ಹೇಳಿದರು.

ADVERTISEMENT

ಮರಾಠ ಅಭಿವೃದ್ಧಿ ನಿಗಮ, ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಹಾಗೂ ಮಹಾರಾಷ್ಟ್ರ ಏಕೀಕರಣ ನಿಷೇಧಕ್ಕೆ ಆಗ್ರಹಿಸಿ ಜ. 30ರಂದು ರಾಜ್ಯದಲ್ಲಿ ರೈಲು ಬಂದ್ ಮಾಡಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಿದ್ದೇ ಅಕ್ರಮ ಗಣಿಗಾರಿಕೆಗಳಿಂದ. ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರು ಬಿಎಸ್‌ವೈ ಸಂಪುಟದಲ್ಲಿ ಮಂತ್ರಿಗಳಾಗಿದ್ದವರು. ಬಳ್ಳಾರಿ ಗಣಿ ಮಾಲೀಕರು, ಬಿಎಸ್‌ವೈ ಅವರನ್ನು ಅಧಿಕಾರಕ್ಕೆ ತಂದರು. ಶಿವಮೊಗ್ಗದಲ್ಲಿ ನಡೆದಿರುವುದು ಭಾರೀ ದೊಡ್ಡ ದುರಂತ. ಈ ವಿಚಾರದಲ್ಲಿ ಅಕ್ರಮ ಸಕ್ರಮ ಮಾಡಿಕೊಳ್ಳಲು ಅವಕಾಶ ಉಂಟೇ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿರುವ ಎಲ್ಲ ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು. ಗಣಿಗಾರಿಕೆಯಲ್ಲಿ ಸತ್ತವರಿಗೆ ಕನಿಷ್ಠ ₹ 1 ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಕರುನಾಡ ಸೇನೆಯ ರಾಜ್ಯ ಉಪಾಧ್ಯಕ್ಷ ಎಂ. ಜಗದೀಶ್, ಪದಾಧಿಕಾರಿಗಳಾದ ಗಾಯತ್ರಿ ಬಾಯಿ, ಜಯಕುಮಾರ್, ಜಯರಾಮು, ತ್ಯಾಗರಾಜ್, ರಮೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.