ADVERTISEMENT

ವಿಧಾನಸೌಧ ಚಲೋ 19ರಂದು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2022, 4:29 IST
Last Updated 17 ಫೆಬ್ರುವರಿ 2022, 4:29 IST

ರಾಮನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ಸಂವಿಧಾನ ರಕ್ಷಣಾ ಮಹಾ ಒಕ್ಕೂಟದಿಂದ ಇದೇ 19ರಂದು ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಮತಾ ಸೈನಿಕ ದಳ ರಾಜ್ಯ ಯುವ ಘಟಕದ ಅಧ್ಯಕ್ಷ ಜಿ. ಗೋವಿಂದಯ್ಯ ತಿಳಿಸಿದರು.

‘ಜ. 26ರಂದು ರಾಯಚೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ಥಳೀಯ ನ್ಯಾಯಾಧೀಶ ಅಂಬೇಡ್ಕರ್ ಭಾವಚಿತ್ರ ಇರುವ ಕಾರಣಕ್ಕೆ ಧ್ವಜಾರೋಹಣ ಮಾಡಲು ಹಿಂದೇಟು ಹಾಕಿದ್ದರು. ಇದನ್ನು ಖಂಡಿಸಿ ಈಗಾಗಲೇ ರಾಜ್ಯದಾದ್ಯಂತ ಪ್ರತಿಭಟನೆ, ಬಂದ್ ನಡೆದಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿತ್ತು’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಘಟನೆ ಖಂಡಿಸಿ ಜ್ಞಾನಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಂಡಿದ್ದು, ಈಗಾಗಲೇ ಪಾದಯಾತ್ರೆಯು ಮಂಡ್ಯ ತಲುಪಿದ್ದು, ರಾಮನಗರಕ್ಕೂ ಬರಲಿದೆ. ಈ ವೇಳೆ ಆ ದಲಿತ ಸಂಘಟನೆಗಳ ಮುಖಂಡರು ಹಾಜರಿರಲಿದ್ದಾರೆ. ಜಿಲ್ಲೆಯಲ್ಲಿ ಭೀಮ ರಥಯಾತ್ರೆ ಹಮ್ಮಿಕೊಳ್ಳಲಾಗುತ್ತದೆ ಎಂದು
ಹೇಳಿದರು.

ADVERTISEMENT

ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ ಚಳವಳಿಯಲ್ಲಿ ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೊದಲಾದ ಜಿಲ್ಲೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಮುಖಂಡರಾದ ಶಿವಕುಮಾರಸ್ವಾಮಿ, ರವಿಕುಮಾರ್, ಹರೀಶ್ ಬಾಲು, ಗುರುಮಲ್ಲಯ್ಯ, ವೆಂಕಟೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.